ನವದೆಹಲಿ: ಎಂಜಿನಿಯರುಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಇದೇ ಆಗಸ್ಟ್28ರಂದು ಹೊರಡಿಸಿದ್ದ ಅಧಿಸೂಚನೆಗೆ ಈ ಹಿಂದೆ ನೀಡಿದ್ದ ಮಧ್ಯಾಂತರ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ಡಿಸೆಂಬರ್ 10ರವರೆಗೆ ವಿಸ್ತರಿಸಿದೆ.
ಹೊಸ ಮೀಸಲಾತಿ ನೀತಿಯಿಂದ ಕೆಲಸದ ಕಳೆದು ಕೊಳ್ಳುವ ಭೀತಿ ಎದುರಿಸುತ್ತಿರುವ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ಎಂಜಿನಿಯರುಗಳು ಕೆಪಿಎಸ್ಸಿ ಅಧಿಸೂಚನೆ ವಿರುದ್ಧ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ವಿವರಣೆ ನೀಡಲು ಕಾಲಾವಕಾಶ ಕೋರಿ ಕರ್ನಾಟಕ ಸರ್ಕಾರ ಮತ್ತು ಕೆಪಿಎಸ್ಸಿ ಪರ ವಕೀಲರು ಮಾಡಿದ ಮನವಿಯನ್ನು ನ್ಯಾಯಪೀಠ ಪುರಸ್ಕರಿಸಿತು.
ಎಂಜಿನಿಯರುಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸದಂತೆ ಈ ಹಿಂದೆ ತಾನು ನೀಡಿದ್ದ ತಡೆಯಾಜ್ಞೆ ಡಿಸೆಂಬರ್ 10ವರೆಗೂ ಮುಂದುವರೆಯಲಿದೆ. ಅದೇ ದಿನ ಮುಂದಿನ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದೆ.
ಒಂದು ವೇಳೆ ಹೊಸದಾಗಿ ನೇಮಕಾತಿ ನಡೆದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ 1993–94ರಲ್ಲಿ ಸರ್ಕಾರ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದ 417 ಸಹಾಯಕ ಹಾಗೂ ಕಿರಿಯ ಎಂಜಿನಿಯರುಗಳು ಕೆಲಸ ಕಳೆದುಕೊಳ್ಳುವ ಭೀತಿ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.