ಚೆನ್ನೈ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ ಎರಡು ದಿನಗಳಲ್ಲಿ ಕರ್ನಾಟಕ, ಕೇರಳದ ಕೆಲ ಪ್ರದೇಶಗಳು ಹಾಗೂ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 24ರಿಂದ 48 ಗಂಟೆ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ ನಿರ್ದೇಶಕ ಬಾಲಚಂದ್ರನ್ ತಿಳಿಸಿದ್ದಾರೆ.
ಮೂರೂ ರಾಜ್ಯಗಳ ಕೆಲ ಭಾಗಗಳಲ್ಲಿ ಚಂಡಮಾರುತ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಜೂನ್ 1ರಂದು ನೈರುತ್ಯ ಮುಂಗಾರು ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಕೆಲವು ದಿನಗಳಿಂದ ಕೇರಳ, ತಮಿಳುನಾಡಿನಲ್ಲಿ ಸಾಕಷ್ಟು ಮಳೆಯಾಗಿದೆ. ಕೇರಳದ ತಿರುವನಂತಪುರ ನಗರದಲ್ಲಿ 10 ಸೆಂ. ಮೀ. ಮತ್ತು ಪಾಲಕ್ಕಾಡ್ ಜಿಲ್ಲೆಯ ತ್ರಿತ್ತಾಲ ಗ್ರಾಮದಲ್ಲಿ 7 ಸೆಂ. ಮೀ. ಮಳೆಯಾಗಿದೆ. ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಾಲ್ಕು ಸೆಂ.ಮೀ. ಮಳೆ ಸುರಿದಿದೆ. ಕೇರಳದಲ್ಲಿ ಈಗಾಗಲೇ ಮುಂಗಾರುಪೂರ್ವ ಮಳೆ ಸುರಿಯಲು ಆರಂಭಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.