ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ ಪೀಟರ್ ಮುಖರ್ಜಿ ಅವರನ್ನು ಮಾರ್ಚ್ 31ರವರೆಗೆ ಸಿಬಿಐ ವಶಕ್ಕೆ ಒಪ್ಪಿಸಿ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ನೀಡಿದೆ.
ಪ್ರಕರಣದ ಮತ್ತೊಬ್ಬ ಆರೋಪಿ ಕಾರ್ತಿ ಚಿದಂಬರಂ ಹಾಗೂ ಇತರರ ಜತೆಗೆ ಮುಖರ್ಜಿ ಅವರನ್ನು ಮುಖಾಮುಖಿಯಾಗಿಸಿ ವಿಚಾರಣೆ ಮಾಡಬೇಕು. ಆದ್ದರಿಂದ ಮುಖರ್ಜಿ ಅವರನ್ನು ವಶಕ್ಕೆ ನೀಡಬೇಕು ಎಂದು ಕೋರಿ ಸಿಬಿಐ ಅರ್ಜಿ ಸಲ್ಲಿಸಿತ್ತು.
ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸುನಿಲ್ ರಾಣಾ ಅವರು, ಮುಖರ್ಜಿ ಅವರನ್ನು ವಶಕ್ಕೆ ಪಡೆಯಲು ಸಿಬಿಐಗೆ ಅವಕಾಶ ನೀಡಿದರು.
ಐಎನ್ಎಕ್ಸ್ ಮೀಡಿಯಾ, ಮುಖರ್ಜಿ ಹಾಗೂ ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯವೂ ಪ್ರಕರಣ ದಾಖಲಿಸಿಕೊಂಡಿದೆ. ಮಾರಿಷಸ್ನಿಂದ ಹೂಡಿಕೆ ಪಡೆಯುವ ವೇಳೆ ಐಎನ್ಎಕ್ಸ್ ಮೀಡಿಯಾ ಕಂಪನಿಯು ವಿದೇಶಿ ಹೂಡಿಕೆ ಉತ್ತೇಜನ ಮಂಡಳಿ (ಎಫ್ಐಪಿಬಿ) ನಿಯಮಾವಳಿ
ಗಳನ್ನು ಉಲ್ಲಂಘಿಸಿದ ಆರೋಪ ಎದುರಿಸುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.