ಚೆನ್ನೈ: ಬಹುನಿರೀಕ್ಷಿತ ‘ಕಾಲಾ’ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ನಿಷೇಧ ಹೇರಿರುವ ಬಗ್ಗೆ ಪ್ರತಿಕ್ರಿಯಿಸಿರುವ ನಟ ರಜನಿಕಾಂತ್, ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿ ಈ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸುವ ವಿಶ್ವಾಸವಿದೆ ಎಂದರು.
ಕಾವೇರಿ ವಿಚಾರದಲ್ಲಿ ಕರ್ನಾಟಕದ ವಿರುದ್ಧ ಹೇಳಿಕೆ ನೀಡಿದ್ದರಿಂದ ಸೂಪರ್ ಸ್ಟಾರ್ ರಜನಿಕಾಂತ್ ಅವರ ‘ಕಾಲಾ’ ಚಿತ್ರ ರಾಜ್ಯದಲ್ಲಿ ತೆರೆ ಕಾಣಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರು ಮಂಗಳವಾರ ತಿಳಿಸಿದ್ದರು.
ಸ್ಟೆರ್ಲೈಟ್ ತಾಮ್ರ ಘಟಕವನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟವರ ಕುಟುಂಬದವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ಚಲನಚಿತ್ರ ಮಂಡಳಿ, ದಕ್ಷಿಣ ಭಾರತದ ಚಲನಚಿತ್ರ ಮಂಡಳಿಯ ಅಂಗ. ಖಂಡಿತ ಅವರು ಮಧ್ಯಪ್ರವೇಶಿಸಿ ಸೌಹಾರ್ದಯುತವಾಗಿ ವಿವಾದ ಬಗೆಹರಿಸುತ್ತಾರೆ’ ಎಂದು ತಿಳಿಸಿದರು.
ಮನವಿ: ಚಿತ್ರ ಬಿಡುಗಡೆಗೆ ಅವಕಾಶ ಮಾಡಿಕೊಡಬೇಕು ಎಂದು ತಮಿಳುನಾಡು ಚಿತ್ರ ನಿರ್ಮಾಪಕರ ಮಂಡಳಿಯು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.