ADVERTISEMENT

ಕಾವೇರಿ: 9ರಂದು ಕೇಂದ್ರದ ಸಭೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2018, 19:30 IST
Last Updated 5 ಮಾರ್ಚ್ 2018, 19:30 IST
ಸಾಂದರ್ಭಿಕ ಚಿತ್ರ.
ಸಾಂದರ್ಭಿಕ ಚಿತ್ರ.   

ನವದೆಹಲಿ: ಕಾವೇರಿ ಜಲವಿವಾದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ ಕಳೆದ ತಿಂಗಳು ನೀಡಿರುವ ಆದೇಶದ ಬಗ್ಗೆ ಚರ್ಚಿಸಲು ಕೇಂದ್ರದ ಜಲಸಂಪನ್ಮೂಲ ಸಚಿವಾಲಯ ಇದೇ 9ರಂದು ಕಣಿವೆ ರಾಜ್ಯಗಳ ಅಧಿಕಾರಿಗಳ ಸಭೆ ಕರೆದಿದೆ.

ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕೇರಳ ಸರ್ಕಾರಗಳ ಮುಖ್ಯ ಕಾರ್ಯದರ್ಶಿಯವರ ಸಭೆ ಆಯೋಜಿಸಲಾಗಿದೆ. ‌

ಕಾವೇರಿ ಕುರಿತು ಸುಪ್ರೀಂ ಕೋರ್ಟ್‌ ಫೆಬ್ರುವರಿ 16ರಂದು ಪ್ರಕಟಿಸಿರುವ ಆದೇಶದಲ್ಲಿರುವ ಮಹತ್ವದ ಅಂಶಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.

ADVERTISEMENT

ಕಾವೇರಿ ನದಿ ನೀರು ಹಂಚಿಕೆ ಹಾಗೂ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆಯ ಕುರಿತು ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.

ಕೇಂದ್ರದ ಜಲಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಉಪೇಂದ್ರ ಪ್ರಸಾದ್‌ ಸಿಂಗ್‌ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರದ ಜಲಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ನೇತೃತ್ವದಲ್ಲಿ ಕಣಿವೆ ವ್ಯಾಪ್ತಿಯ ಎಲ್ಲ ರಾಜ್ಯಗಳ ಮುಖ್ಯಮಂತ್ರಿಯವರ ಸಭೆ ಆಯೋಜಿಸಲು ಈಗಾಗಲೇ ಪತ್ರ ಬರೆಯಲಾಗಿದ್ದು, ಶೀಘ್ರದಲ್ಲೇ ಸಭೆ ನಡೆಯಲಿರುವ ದಿನಾಂಕ ಅಂತಿಮಗೊಳಿಸಲಾಗುವುದು.

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಆರು ವಾರದೊಳಗೆ ‘ಸ್ಕೀಂ’ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿರುವುದರಿಂದ ಈ ಸಭೆ ಆಯೋಜಿಸಲಾಗಿದೆ. ಆದರೆ, ತಕ್ಷಣಕ್ಕೇ ನಿರ್ವಹಣಾ ಮಂಡಳಿ ರಚಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.