ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನಲ್ಲಿ ಶನಿವಾರ ರಂಜಾನ್ ಪ್ರಾರ್ಥನೆಯ ಬಳಿಕ ಕಲ್ಲುತೂರಾಟಗಾರರು ಮತ್ತು ಭದ್ರತಾಪಡೆಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. 10 ಜನ ಗಾಯಗೊಂಡಿದ್ದಾರೆ.
ಪ್ರತಿಭಟನೆ ನಡೆಸುತ್ತಿದ್ದ ಯುವಕರು ಭದ್ರತಾ ಪಡೆಗಳತ್ತ ಕಲ್ಲುತೂರಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಅಶ್ರುವಾಯು, ರಬ್ಬರ್ ಗುಂಡುಗಳನ್ನು ಸಿಡಿಸಿ ಕಲ್ಲುತೂರಾಟ ನಡೆಸುತ್ತಿದ್ದವರನ್ನು ಚದುರಿಸಲು ಪ್ರಯತ್ನಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಬ್ರಕ್ಪೊರಾದ ಶೀರಜ್ ಅಹ್ಮದ್ ಎಂಬುವವರು ಮೃತಪಟ್ಟಿದ್ದಾರೆ. ಇನ್ನಿಬ್ಬರ ಕಣ್ಣಿಗೆ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆದರೆ, ಭದ್ರತಾ ಪಡೆಗಳು ಮತ್ತು ಕಲ್ಲುತೂರಾಟಗಾರರ ಮಧ್ಯೆ ನಡೆದ ಘರ್ಷಣೆಯಲ್ಲಿ ವ್ಯಕ್ತಿ ಮೃತಪಟ್ಟಿರುವುದನ್ನು ಪೊಲೀಸ್ ವಕ್ತಾರರು ಅಲ್ಲಗಳೆದಿದ್ದಾರೆ. ಗ್ರೆನೇಡ್ ಸ್ಫೋಟಗೊಂಡು ಅಹ್ಮದ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಪರಿಣಾಮವಾಗಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.