ಅಮರಾವತಿ: ಆಂಧ್ರಪ್ರದೇಶದ ಬಗ್ಗೆ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ನೀತಿಯನ್ನು ವಿರೋಧಿಸಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಇದೇ 20ರಂದು ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.
127ನೇ ಅಂಬೇಡ್ಕರ್ ಜಯಂತಿಯ ಅಂಗವಾಗಿ ಇನಾವೋಲು ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿರುವ ನಾಯ್ಡು, ‘ಏಪ್ರಿಲ್ 20ರಂದು ನನ್ನ ಹುಟ್ಟಿದ ದಿನ. ಅದೇ ದಿನ ಉಪವಾಸ ಮಾಡುತ್ತೇನೆ’ ಎಂದಿದ್ದಾರೆ.
‘ಟಿಡಿಪಿ ಮತ್ತೊಮ್ಮೆ ಕಿಂಗ್ ಮೇಕರ್ ಆಗಿ ಹೊರಹೊಮ್ಮುವುದು ಖಚಿತ. ಕೇಂದ್ರದಲ್ಲಿ ಯಾರು ಸರ್ಕಾರ ರಚಿಸಬೇಕು, ಯಾರು ಪ್ರಧಾನಿಯಾಗಬೇಕು ಎಂಬುದನ್ನು ನಾವೇ ನಿರ್ಧರಿಸುತ್ತೇವೆ. ಈ ಹಿಂದೆ ಕೇಂದ್ರದಲ್ಲಿ ನಮ್ಮ ಮಾತಿಗೆ ಸಾಕಷ್ಟು ಮನ್ನಣೆ ಸಿಗುತ್ತಿತ್ತು. ಇನ್ನು ಮುಂದೆಯೂ ನಮ್ಮ ಮಾತೇ ನಡೆಯಲಿದೆ. ಕೇಂದ್ರವನ್ನು ನಿಯಂತ್ರಿಸುವ ಏಕೈಕ ಪಕ್ಷ ನಮ್ಮದಾಗಲಿದೆ’ ಎಂದು ನಾಯ್ಡು ತಿಳಿಸಿದ್ದಾರೆ.
‘ರಾಜ್ಯದಲ್ಲಿನ 25 ಲೋಕಸಭಾ ಸ್ಥಾನಗಳಲ್ಲಿ ಪಕ್ಷವನ್ನು ಗೆಲ್ಲಿಸಿ, ಕೇಂದ್ರದಲ್ಲಿ ಅಧಿಪತ್ಯ ಸಾಧಿಸಲು ಸಹಾಯ ಮಾಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ.
‘ರಾಜ್ಯದ ಹಿತಾಸಕ್ತಿ ಕಾಪಾಡಲು ಬಿಜೆಪಿ ಜತೆ ಕೈಜೋಡಿಸಲಾಗಿತ್ತು. ಆದರೆ, ಬಿಜೆಪಿ ನಮಗೆ ನಂಬಿಕೆ ದ್ರೋಹ ಮಾಡಿತು. ಯಾವುದೇ ರೀತಿ ರಾಜಿ ಮಾಡಿಕೊಳ್ಳದೆ ರಾಜ್ಯದ ಹಕ್ಕುಗಳನ್ನು ಪಡೆಯಲು ಹೋರಾಟ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.