ನವದೆಹಲಿ: ‘ಭಾರತ– ಚೀನಾ ಗಡಿಯಲ್ಲಿ ಕಂಡುಬಂದಿರುವ ಉದ್ವಿಗ್ನ ಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಜೆಡಿಎಸ್ನ ಸಮ್ಮತಿ ಇದೆ’ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದರು.
ರಕ್ಷಣಾ ಸಚಿವ ಅರುಣ್ ಜೇಟ್ಲಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಶನಿವಾರ ಸಂಜೆ ಏರ್ಪಡಿಸಿದ್ದ ಸರ್ವ ಪಕ್ಷಗಳ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಭಾರತ ಆಗಲಿ, ಚೀನಾ ಆಗಲಿ ಕಾಲು ಕೆದರಿ ಪರಸ್ಪರ ಯುದ್ಧಕ್ಕೆ ಆಹ್ವಾನಿಸುವ ಸ್ಥಿತಿಯಲ್ಲಿ ಇಲ್ಲ. ಯುದ್ಧದ ಪರಿಣಾಮಗಳನ್ನು ಎಲ್ಲರೂ ತಿಳಿದಿದ್ದಾರೆ. ಆದರೂ ರಾಜತಾಂತ್ರಿಕ ನಿರ್ಧಾರಗಳು ಯಾವ ರೀತಿ ಇರುತ್ತವೆ ಎಂಬುದನ್ನು ಮುಂಚಿತವಾಗಿ ಹೇಳಲು ಬರುವುದಿಲ್ಲ ಎಂದು ಅವರು ತಿಳಿಸಿದರು.
ಹ್ಯಾಂಬರ್ಗ್ನಲ್ಲಿ ಇತ್ತೀಚೆಗೆ ನಡೆದ ಜಿ–20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷರೊಂದಿಗೆ ಚರ್ಚಿಸಿದ ಮತ್ತು ಸಿಕ್ಕಿಂ ಗಡಿಯ ಸದ್ಯದ ಸ್ಥಿತಿಗತಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಚೀನಾದೊಂದಿಗೆ ಮಾತುಕತೆ ಮೂಲಕ ಉದ್ವಿಗ್ನ ಸ್ಥಿತಿಯನ್ನು ಶಮನಗೊಳಿಸಲು ಪ್ರಯತ್ನಿಸಬೇಕು ಎಂಬ ಸಲಹೆ ನೀಡಲಾಯಿತು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.