ನವದೆಹಲಿ: ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಎನ್ಡಿಎ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪಣ ತೊಟ್ಟಿರುವ ‘ಇಂಡಿಯಾ’ವು, ಲೋಕಸಭೆಯಲ್ಲಿ ಬುಧವಾರವೇ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿವೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಸಂಸದರಿಗೆ ವಿಪ್ ಜಾರಿ ಮಾಡಿದೆ, ಇಂದು ಲೋಕಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಬೆಳಗ್ಗೆ ಕಾಂಗ್ರೆಸ್ ಸಂಸದೀಯ ಸಭೆ ನಡೆದಿದ್ದು ಒಟ್ಟು 26 ಪಕ್ಷಗಳ ಒಕ್ಕೂಟ ಇಂಡಿಯಾದಿಂದ ಅವಿಶ್ವಾಸ ನಿರ್ಣಯ ಮಂಡನೆ ನಡೆಯಲಿದೆ ಎಂದು ಸಂಸತ್ನ ಕಾಂಗ್ರೆಸ್ ಪಕ್ಷದ ಉಪನಾಯಕ ಗೌರವ್ ಗೋಗಿ ಹೇಳಿದ್ದಾರೆ.
ಈ ಕುರಿತು ಸ್ಪೀಕರ್ ಅವರಿಗೆ ಲಿಖಿತವಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೌರವ್ ಗೋಗಿ ಮಾಹಿತಿ ನೀಡಿದ್ದಾರೆ.
ಬಳಿಕ ರಾಜ್ಯಸಭೆಯಲ್ಲಿಯೂ ಇದೇ ತಂತ್ರ ಹೂಡಲು ತೀರ್ಮಾನಿಸಲಾಗಿದೆ ಎಂದು ವಿರೋಧ ಪಕ್ಷಗಳ ಮೂಲಗಳು ತಿಳಿಸಿವೆ.
ಆಗಸ್ಟ್ 11 ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ. 23 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ ದೆಹಲಿ ಸುಗ್ರೀವಾಜ್ಞೆ ಸೇರಿದಂತೆ 31 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.