ನವದೆಹಲಿ: ಫೇಸ್ಬುಕ್ ಮಾಹಿತಿ ಸೋರಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಕೇಂಬ್ರಿಡ್ಜ್ ಅನಲಿಟಿಕಾದ ಸೇವೆ ಪಡೆದದ್ದು ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅಲ್ಲ. ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಎಂದು ಕಾಂಗ್ರೆಸ್ ಪ್ರತ್ಯಾರೋಪ ಮಾಡಿದೆ.
ವಾಮಮಾರ್ಗದ ಮೂಲಕ ಚುನಾವಣೆ ಗೆಲ್ಲಲು ಕೇಂಬ್ರಿಡ್ಜ್ ಅನಲಿಟಿಕಾ ಜತೆ ಕಾಂಗ್ರೆಸ್ ಒಪ್ಪಂದ ಮಾಡಿಕೊಂಡಿದೆ ಎಂಬ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಆರೋಪಕ್ಕೆ ಕಾಂಗ್ರೆಸ್ ತೀಕ್ಷ್ಣ ತಿರುಗೇಟು ನೀಡಿದೆ.
ಪಕ್ಷದ ವಿರುದ್ಧದ ಆರೋಪಕ್ಕೆ ಕಾಂಗ್ರೆಸ್ ಮಾಧ್ಯಮ ಘಟಕದ ಉಸ್ತುವಾರಿ ರಣದೀಪ್ ಸರ್ಜೆವಾಲ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದದರು.
‘ಬಿಜೆಪಿಯ ಸುಳ್ಳಿನ ಕಾರ್ಖಾನೆಯಿಂದ ಸೃಷ್ಟಿಯಾದ ಹೊಸ ಸುಳ್ಳು ಇದು. ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಸುಳ್ಳು ಸುದ್ದಿಯನ್ನು ಬಳಸಿಕೊಂಡು ಹೊಸ ಸುಳ್ಳು ಹೇಳಿದ್ದು, ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದ್ದಾರೆ. ಕೇಂಬ್ರಿಡ್ಜ್ ಅನಲಿಟಿಕಾ ಜತೆ ಕಾಂಗ್ರೆಸ್ ಯಾವುದೇ ನಂಟು ಹೊಂದಿಲ್ಲ’ ಎಂದು ಸರ್ಜೆವಾಲ ಹೇಳಿದರು.
ಫೇಸ್ಬುಕ್ ಮಾಹಿತಿಯನ್ನು ಕೇಂಬ್ರಿಡ್ಜ್ ಅನಲಿಟಿಕಾ ಸೋರಿಕೆ ಮಾಡಿದ್ದು, 2016ರಲ್ಲಿ ನಡೆದಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲೂ ಪ್ರಭಾವ ಬೀರಿತ್ತು ಎಂಬ ಆರೋಪವಿದೆ. ಅಂತಹ ಸಂಸ್ಥೆ ಜತೆ ಈಗ ಕಾಂಗ್ರೆಸ್ ನಂಟು ಹೊಂದಿದೆ ಎಂದು ರವಿಶಂಕರ್ ಪ್ರಸಾದ್ ಆರೋಪಿಸಿದ್ದರು. ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಸಾಮಾಜಿಕ ಜಾಲತಾಣ ಪ್ರೊಫೈಲ್ನಲ್ಲಿ ಕೇಂಬ್ರಿಡ್ಜ್ ಅನಲಿಟಿಕಾದ ಪಾತ್ರವೇನು? ಎಂದು ಪ್ರಶ್ನಿಸಿದ್ದರು.
ಇದನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.