ಕೊಲ್ಕತ್ತಾ (ಐಎಎನ್ಎಸ್): ಇಲ್ಲಿನ ಸೆಲ್ಡಾ ಪ್ರದೇಶದಲ್ಲಿರುವ ಬಹುಮಹಡಿ ಮಾರುಕಟ್ಟೆ ಸಂಕೀರ್ಣದಲ್ಲಿ ಬುಧವಾರ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಸುಮಾರು 19 ಜನರು ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ಆಕಸ್ಮಿಕವಲ್ಲ `ವಿಧ್ವಂಸಕ ಕೃತ್ಯ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆರೋಪಿಸಿದ್ದಾರೆ.
ಸುದ್ಧಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಮತಾ ಅವರು ಘಟನೆ ಕುರಿತಂತೆ ತನಿಖೆಗೆ ಆದೇಶಿಸಿ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು.
`ಘಟನೆ ಕುರಿತು ಪೊಲೀಸ್, ಅಗ್ನಿಶಾಮಕ ಇಲಾಖೆ ಹಾಗೂ ಪುರಸಭೆ ಜಂಟಿಯಾಗಿ ತನಿಖೆ ನಡೆಸಿ ಮೂರು ದಿನಗಳ ಒಳಗೆ ವರದಿ ಸಲ್ಲಿಸಲಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಮಮತಾ ಅವರು ತಿಳಿಸಿದರು.
ನಸುಕಿನ ಜಾವ 4 ಗಂಟೆ ಸುಮಾರಿಗೆ ಈ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಮೃತರಲ್ಲಿ ಅನೇಕರು ಈ ವೇಳೆ ನಿದ್ದೆಯಲ್ಲಿದ್ದರು ಎನ್ನಲಾಗಿದೆ.
ಸುದ್ಧಿ ತಿಳಿಯುತ್ತಿದ್ದಂತೆ ಘಟನಾಸ್ಥಳಕ್ಕೆ ಆಗಮಿಸಿದ 26 ಅಗ್ನಿ ಶಾಮಕ ವಾಹನಗಳು ಹರಸಾಹಸಪಟ್ಟು ಬೆಂಕಿ ನಂದಿಸಿ, ಸಂಕಷ್ಟಕ್ಕೆ ಸಿಲುಕಿದ ಜನರನ್ನು ರಕ್ಷಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.