ADVERTISEMENT

ಕೋಮುಸೌಹಾರ್ದ ಕದಡಲು ಜಾಲತಾಣ ಬಳಕೆ: ಸಿಎಂ ಟೀಕೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2013, 19:59 IST
Last Updated 23 ಸೆಪ್ಟೆಂಬರ್ 2013, 19:59 IST

ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೋಮು ಗಲಭೆಗಳು ಕಡಿಮೆ­ಯಾಗಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಾಮಾಜಿಕ ತಾಣ ಗಳನ್ನು ಉಪಯೋಗಿಸಿಕೊಂಡು ಮತೀಯ ಸೌಹಾರ್ದ ಕೆಡಿಸುವ ಪ್ರಯತ್ನ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮನಮೋಹನ್‌ಸಿಂಗ್‌ ದೆಹಲಿಯಲ್ಲಿ ಸೋಮವಾರ ಕರೆದಿದ್ದ ‘ರಾಷ್ಟ್ರೀಯ ಭಾವೈಕ್ಯ ಮಂಡಳಿ’ ಸಭೆಯಲ್ಲಿ ಗೃಹ ಸಚಿವ ಕೆ.ಜೆ. ಜಾರ್ಜ್‌ ಮುಖ್ಯಮಂತ್ರಿಗಳ ಲಿಖಿತ ಭಾಷಣ ಓದಿದರು. ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸಭೆಯಲ್ಲಿ ಭಾಗವಹಿಸಲಿಲ್ಲ.

ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸೂಕ್ಷ್ಮ ಪ್ರದೇಶಗಳಲ್ಲಿ ಮತೀಯ ಸೌಹಾರ್ದ ಕೆಡಿಸುವ ಉದ್ದೇಶದಿಂದ ಸಾಮಾಜಿಕ ತಾಣಗಳನ್ನು ಬಳಸುತ್ತಿವೆ. ಮೊಬೈಲ್‌  ಮೂಲಕ ದೊಡ್ಡ ಸಂಖ್ಯೆಯಲ್ಲಿ ಎಸ್‌ಎಂಎಸ್‌ಗಳನ್ನು ರವಾನಿಸುತ್ತಿವೆ. ಇದರಿಂದ ಉದ್ವಿಗ್ನ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಕಾನೂನು– ಸುವ್ಯವಸ್ಥೆ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.