ನವದೆಹಲಿ: ರಾಜ್ಯದಲ್ಲಿ ನಡೆದಿರುವ ಗಣಿ ಚಟುವಟಿಕೆ ಕುರಿತು ಸಮಗ್ರ ವಿವರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನೇತೃತ್ವದ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ಕರ್ನಾಟಕ ಸರ್ಕಾರಕ್ಕೆ ಗುರುವಾರ ನೋಟಿಸ್ ಜಾರಿ ಮಾಡಿದೆ. ಪರಿಸರ ಮತ್ತು ಅರಣ್ಯ ಇಲಾಖೆ ಮಾಜಿ ಕಾರ್ಯದರ್ಶಿ ಪಿ.ವಿ. ಜಯಕೃಷ್ಣ ನೇತೃತ್ವದ ಉನ್ನತ ಅಧಿಕಾರದ ಸಮಿತಿ ರಾಜ್ಯದ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಖಾತೆ ಕಾರ್ಯದರ್ಶಿ ಅವರಿಗೆ ನೋಟಿಸ್ ಜಾರಿ ಮಾಡಿ ಮಾರ್ಚ್ 10ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಅಕ್ರಮ ಗಣಿಗಾರಿಕೆ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪರಿಸರ ಸಂಬಂಧಿತ ವಿಷಯಗಳ ನಿರ್ವಹಣೆಗೆ ರಚಿಸಿರುವ ಐವರು ಸದಸ್ಯರ ಉನ್ನತಾಧಿಕಾರ ಸಮಿತಿಗೆ ಕರ್ನಾಟಕದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತು ವರದಿ ಸಲ್ಲಿಸುವಂತೆ ಕೇಳಿದೆ. ಈ ಹಿನ್ನೆಲೆಯಲ್ಲಿ ಸಿಇಸಿ ನೋಟಿಸ್ ಜಾರಿ ಮಾಡಿದೆ. ಅಗತ್ಯ ಬಿದ್ದರೆ ಸಿಇಸಿ ಸದಸ್ಯರು ಕರ್ನಾಟಕಕ್ಕೆ ತೆರಳಿ ಅಕ್ರಮ ಗಣಿಗಾರಿಕೆ ಕುರಿತು ಪರಿಶೀಲನೆಯನ್ನು ನಡೆಸಬಹುದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.