ನವದೆಹಲಿ (ಪಿಟಿಐ, ಐಎಎನ್ಎಸ್): ಕ್ಷಮಾದಾನ ಅರ್ಜಿಗಳ ಇತ್ಯರ್ಥವನ್ನು ಸರ್ಕಾರ ಕಾರಣವಿಲ್ಲದೇ ವಿಳಂಬ ಮಾಡಿದರೆ ಅಪರಾಧಿಗಳ ಗಲ್ಲುಶಿಕ್ಷೆಯನ್ನು ಜೀವಾವಧಿಗೆ ಪರಿವರ್ತಿಸಬಹುದು ಎಂದು ಇದೇ ಜನವರಿ 21ರಂದು ನೀಡಿದ್ದ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಳ್ಳಿ ಹಾಕಿದೆ.
ಕೇಂದ್ರ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ತಮ್ಮ ಕೊಠಡಿಯಲ್ಲಿ ಪರಿಶೀಲನೆ ನಡೆಸಿದ ಮೂವರು ನ್ಯಾಯಮೂರ್ತಿಗಳು, ಕೇಂದ್ರದ ವಾದದಲ್ಲಿ ಯಾವುದೇ ಹುರುಳಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದರು.
ಭಯೋತ್ಪಾದನೆ ನಿಗ್ರಹ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿ ಶಿಕ್ಷೆಗೆ ಒಳಗಾದ ಅಪರಾಧಿಗಳು ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಈ ತೀರ್ಪು ಅನ್ವಯಿಸಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ನೇತೃತ್ವದ ನ್ಯಾಯಪೀಠವು ಜ.21ರಂದು ತೀರ್ಪು ನೀಡಿತ್ತು.
ನರಹಂತಕ ವೀರಪ್ಪನ್ ಸಹಚರರು ಸೇರಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 15 ಅಪರಾಧಿಗಳು ಈ ತೀರ್ಪಿನ ಲಾಭ ಪಡೆದು ಮರಣದಂಡನೆಯಿಂದ ಪಾರಾಗಿದ್ದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರಿಗೂ ಇದರಿಂದ ಲಾಭವಾಗಿತ್ತು.
‘ಕ್ಷಮಾದಾನ ಅರ್ಜಿಗಳ ಇತ್ಯರ್ಥ ವಿಳಂಬದ ಕಾರಣಕ್ಕಾಗಿ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಬೇಕು ಎಂಬುವುದು ಸಂವಿಧಾನದ 21ನೇ ಕಲಂಗೆ (ಬದುಕುವ ಹಕ್ಕು) ಸಂಬಂಧಿಸಿದೆ’ ಎಂದು ಕೇಂದ್ರ ಹೇಳಿದೆ.
‘ಹೀಗಾಗಿ ಸಾಂವಿಧಾನಿಕ ಹಕ್ಕಿಗೆ ಸಂಬಂಧಿಸಿದ ಈ ಮಹತ್ವದ ಪ್ರಕರಣವನ್ನು ಸಂವಿಧಾನದ 145 ವಿಧಿಯ ಪ್ರಕಾರ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಬೇಕಿತ್ತು’ ಎಂದು ವಾದಿಸಿದೆ.
‘ಮೂವರು ನ್ಯಾಯಮೂರ್ತಿಗಳ ಪೀಠವು ತನ್ನ ವ್ಯಾಪ್ತಿ ಮೀರಿ ನೀಡಿರುವ ತೀರ್ಪು ನ್ಯಾಯ ಸಾಧುವಲ್ಲ’ ಎಂದು ಕೆೇಂದ್ರ ಸರ್ಕಾರ ಅರ್ಜಿಯಲ್ಲಿ ವಾದಿಸಿತ್ತು.
‘ಕೇಂದ್ರದ ಮರು ಪರಿಶೀಲನಾ ಅರ್ಜಿ ಹಾಗೂ ಪೂರಕ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದೇವೆ. ಆದರೆ, ವಿಚಾರಣೆ ಕೈಗೆತ್ತಿಕೊಳ್ಳಲು ಇರಬೇಕಾದ ಯಾವುದೇ ಅರ್ಹತೆ ಇರದ ಕಾರಣ ಅರ್ಜಿಯನ್ನು ವಜಾ ಗೊಳಿಸಲಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ, ನ್ಯಾಯಮೂರ್ತಿಗಳಾದ ರಂಜನ್ ಗೋಗೊಯ್ ಮತ್ತು ಶಿವಕೀರ್ತಿ ಸಿಂಗ್ ಅವರ ಪೀಠ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.