ರಾಯಪುರ (ಪಿಟಿಐ): ಛತ್ತೀಸಗಡದ ದಾಂತೇವಾಡ ಜಿಲ್ಲೆಯಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 30 ನಕ್ಸಲರು ಮತ್ತು ಮೂವರು ಪೊಲೀಸರು ಸತ್ತಿದ್ದಾರೆ ಹಾಗೂ 9 ಜನರಿಗೆ ಗಾಯಗಳಾಗಿವೆ.
ದಾಂತೇವಾಡದ ನಕ್ಸಲ್ಪೀಡಿತ ಪ್ರದೇಶದಲ್ಲಿ 145 ಪೊಲೀಸ್ ಸಿಬ್ಬಂದಿ ಶೋಧನಾ ಕಾರ್ಯ ನಡೆಸುತ್ತಿದ್ದ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದರು. ಪ್ರತಿಯಾಗಿ ಗುಂಡು ಹಾರಿಸಲಾಯಿತು. ಈ ಗುಂಡಿನ ಕಾಳಗದಲ್ಲಿ ಮೂವರು ಪೊಲೀಸರು ಸತ್ತಿದ್ದು, 9 ಜನರಿಗೆ ಗಾಯಗಳಾಗಿವೆ ಎಂದು ನಕ್ಸಲ್ ಕಾರ್ಯಾಚರಣೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ರಾಮ್ ನಿವಾಸ್ ತಿಳಿಸಿದ್ದಾರೆ.
ಗುಂಡಿನ ಚಕಮಕಿ ಈಗ ನಿಂತಿದ್ದು, ನಕ್ಸಲರ ಶವಗಳನ್ನು ವಶಪಡಿಸಿಕೊ ಳ್ಳಲು ಕ್ರಮ ತೆಗೆದುಕೊಳ್ಳಲಾಗಿದೆ ಹಾಗೂ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಪಡೆಯನ್ನು ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪಟ್ನಾ ವರದಿ (ಐಎಎನ್ಎಸ್): ಬಿಹಾರದ ಚಂಪಾರಣ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಆರು ಮಾವೊವಾದಿಗಳು ಮೃತಪಟ್ಟಿದ್ದಾರೆ.
ರಾಜಧಾನಿ ಪಟ್ನಾದಿಂದ 200 ಕಿ.ಮೀ ದೂರದ ದರ್ಮಾ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಖಚಿತ ಮಾಹಿತಿಯ ಮೇರೆಗೆ ಸ್ಥಳೀಯ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿ ಮಾವೋವಾದಿಗಳನ್ನು ಸುತ್ತುವರೆದು ಈ ಕಾರ್ಯಾಚರಣೆ ನಡೆಸಿದ್ದಾರೆ.
ಹತ್ತು ಮಂದಿ ಬಂಡುಕೋರರನ್ನು ಬಂಧಿಸಿ 1,000 ಜೀವಂತ ಕಾಡತೂಸು, 5 ಎಸ್ಎಲ್ಆರ್ ರೈಫಲ್ ಮತ್ತು 8 ರೈಫಲ್ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.