ಗೋರಖಪುರ: ಉತ್ತರಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಹಿಂದಿಕ್ಕಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸತತ ಐದು ಬಾರಿ ಗೆಲುವು ಸಾಧಿಸಿದ್ದ ಗೋರಖಪುರ ಲೋಕಸಭಾ ಕ್ಷೇತ್ರದಲ್ಲಿ ಎರಡು ಸುತ್ತಿನ ಮತ ಎಣಿಕೆ ಪೂರ್ಣಗೊಂಡಾಗ ಮುನ್ನಡೆ ಸಾಧಿಸಿದ್ದ ಬಿಜೆಪಿಯನ್ನು ಸಮಾಜವಾದಿ ಪಕ್ಷದ ಅಭ್ಯರ್ಥಿ ಹಿಂದಿಕ್ಕಿದ್ದಾರೆ.
ಗೋರಖಪುರದಲ್ಲಿ 19 ಸುತ್ತು ಮತ ಎಣಿಕೆ ಪೂರ್ಣಗೊಂಡಾಗ ಸಮಾಜವಾದಿ ಪಕ್ಷದ ಅಭ್ಯರ್ಥಿ 26,960 ಮತಗಳ ಮುನ್ನಡೆ ಸಾಧಿಸಿದ್ದಾರೆ.ಫುಲ್ಪುರ್ ಲೋಕಸಭಾ ಕ್ಷೇತ್ರದಲ್ಲಿ 15 ಸುತ್ತಿನ ಮತ ಎಣಿಕೆ ಪೂರ್ಣಗೊಂಡಾಗ ಸಮಾಜವಾದಿ ಪಕ್ಷದ ಅಭ್ಯರ್ಥಿ 22824 ಮತಗಳ ಮುನ್ನಡೆ ಸಾಧಿಸಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ ಅವರು ಮೂರು ಲಕ್ಷಕ್ಕಿಂತಲೂ ಹೆಚ್ಚು ಮತ ಪಡೆದು ಗೆಲುವು ಸಾಧಿಸಿದ ಕ್ಷೇತ್ರವಾಗಿದೆ ಗೋರಖಪುರ. ಉಪ ಮುಖ್ಯಮಂತ್ರಿಯಾಗಿದ್ದ ಕೇಶವ್ ಪ್ರಸಾದ್ ಮೌರ್ಯ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾರಣ ಫುಲ್ಪುರ್ನಲ್ಲಿ ಉಪ ಚುನಾವಣೆ ನಡೆದಿತ್ತು.
ಮಾಧ್ಯಮದವರಿಗೆ ತಡೆ
ಗೋರಖಪುರ ವಿಶ್ವವಿದ್ಯಾನಿಲಯದ ಕಾಮರ್ಸ್ ವಿಭಾಗ ಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ. ಆದರೆ ಇಲ್ಲಿ ಆಸುಪಾಸು ಮಾಧ್ಯಮದವರಿಗೆ ಪ್ರವೇಶಾನುಮತಿ ಇಲ್ಲ. ವಿಶೇಷ ಚುನಾವಣಾ ಆಯೋಗದ ಗುರುತಿನ ಚೀಟಿ ಹೊಂದಿದ ಮಾಧ್ಯಮದವರು ಮತ ಎಣಿಕೆ ಸುದ್ದಿಯನ್ನು ವರದಿ ಮಾಡಬಹುದಾದರೂ ಮತ ಎಣಿಕೆ ಪ್ರದೇಶದಿಂದ 15 ಅಡಿ ದೂರದಲ್ಲಿರುವಂತೆ ಮಾಧ್ಯಮದವರಿಗೆ ಸೂಚಿಸಲಾಗಿದೆ. ಇಷ್ಟು ದೂರದಿಂದ ಮತ ಎಣಿಕೆ ಪ್ರಕ್ರಿಯೆ ಸರಿಯಾಗಿ ಕಾಣಿಸುವುದಿಲ್ಲ. ಅಷ್ಟೇ ಅಲ್ಲದೆ ಪರದೆಗಳನ್ನು ಹಾಕಿ ಮಾಧ್ಯಮದವರಿಗೆ ಏನೂ ಕಾಣದಂತೆ ತಡೆಯೊಡ್ಡವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.