ಅಮರಾವತಿ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ತಮ್ಮ 69ನೇ ಜನ್ಮದಿನವಾದ ಶುಕ್ರವಾರದಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು.
ವಿಜಯವಾಡದ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ 12 ಗಂಟೆಗಳ ’ಧರ್ಮ ಪೋರಾಟ ದೀಕ್ಷಾ’ ಹೆಸರಿನ ಕಾರ್ಯಕ್ರಮಕ್ಕೆ ಪ್ರಾರ್ಥನೆಯೊಂದಿಗೆ ಚಾಲನೆ ನೀಡುವ ಮೂಲಕ ಬೆಳಿಗ್ಗೆ 7ಗಂಟೆಯಿಂದ ನಾಯ್ಡು ಉಪವಾಸ ಆರಂಭಿಸಿದರು. ನಾಯ್ಡು ಅವರ ಪುತ್ರ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಎನ್.ಲೋಕೇಶ್ ಹಾಗೂ ಉಪಮುಖ್ಯಮಂತ್ರಿ ರಾಜಪ್ಪ ಅವರು ಸಹ ಉಪವಾಸ ಕೈಗೊಂಡರು.
ಉಪವಾಸ ಸತ್ಯಾಗ್ರಹದ ವೇದಿಕೆಯಲ್ಲಿ 250ಕ್ಕೂ ಹೆಚ್ಚು ಜನರಿಗೆ ಸ್ಥಳಾವಕಾಶ ಕಲ್ಪಿಸಲಾಗಿತ್ತು. ಜತೆಗೆ ವೇದಿಕೆ ಮುಂಭಾಗ 10 ಸಾವಿರ ಜನರಿಗೆ ಕುಳಿತುಕೊಳ್ಳಲು ಬೃಹತ್ ಪೆಂಡಾಲ್ ಹಾಕಲಾಗಿತ್ತು. ರಾಜ್ಯಕ್ಕೆ ಕೇಂದ್ರ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಚಂದ್ರಬಾಬು ನಾಯ್ಡು ಒತ್ತಾಯಿಸಿದರು. ಆಂಧ್ರಪ್ರದೇಶದ ಎಲ್ಲ ಜಿಲ್ಲೆಗಳಲ್ಲೂ ಸಚಿವರ ನೇತೃತ್ವದಲ್ಲಿ ಹಾಗೂ ವಿಧಾನಸಭೆ ಕ್ಷೇತ್ರಗಳಲ್ಲಿ ಶಾಸಕರ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.