ADVERTISEMENT

ಚುನಾವಣಾ ಪ್ರಕ್ರಿಯೆ ಚಿತ್ರೀಕರಣ: ರಾವತ್

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 20:20 IST
Last Updated 27 ಮಾರ್ಚ್ 2018, 20:20 IST
ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌ (ಸಂಗ್ರಹ ಚಿತ್ರ).
ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌ (ಸಂಗ್ರಹ ಚಿತ್ರ).   

ನವದೆಹಲಿ: ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲೆಂದೇ ಜಾರಿಯಾಗಲಿರುವ ಮಾದರಿ ನೀತಿಸಂಹಿತೆ ಉಲ್ಲಂಘಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಎಚ್ಚರಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌, ಅಭ್ಯರ್ಥಿಗಳು, ಬೆಂಬಲಿಗರು, ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ನೀತಿ ಸಂಹಿತೆ ಉಲ್ಲಂಘಿಸದಂತೆ ಆಯೋಗ ಕಟ್ಟೆಚ್ಚರವಹಿಸಲಿದೆ ಎಂದು ತಿಳಿಸಿದರು.

ಸರ್ಕಾರಗಳು ಆಡಳಿತ ಯಂತ್ರದ ದುರುಪಯೋಗ ಪಡಿಸಿಕೊಳ್ಳುವ, ಹೊಸ ಯೋಜನೆಗಳನ್ನು ಘೋಷಿಸುವ ಪ್ರಕ್ರಿಯೆ ಕಂಡುಬಂದರೂ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ನೀತಿಸಂಹಿತೆ ಕಟ್ಟುನಿಟ್ಟಿನ ಪಾಲನೆಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ADVERTISEMENT

ನಾಮಪತ್ರ ಸಲ್ಲಿಕೆಯಿಂದ ಹಿಡಿದು, ಪರಿಶೀಲನೆ, ಪ್ರಚಾರಸಭೆ, ರಾಜಕೀಯ ಪಕ್ಷಗಳ ಸಮಾವೇಶಗಳು, ರೋಡ್‌ ಷೋ, ಅಭ್ಯರ್ಥಿಗಳಿಗೆ ಚಿಹ್ನೆ ಹಂಚುವಿಕೆ, ಇವಿಎಂ ವಿತರಣೆ, ಮತದಾನದ ನಂತರ ಅವುಗಳನ್ನು ಇರಿಸುವ ಜಾಗ, ಮತದಾನ, ಮತ ಎಣಿಕೆ ಪ್ರಕ್ರಿಯೆಗಳ ವಿಡಿಯೊ ಚಿತ್ರೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಕಳೆದ ಜನವರಿ 1ಕ್ಕೆ 18 ವರ್ಷ ಪೂರೈಸಿರುವ ಯುವಕ/ ಯುವತಿಯರ ಹೆಸರನ್ನು ಕಳೆದ ಫೆಬ್ರುವರಿ 28ಕ್ಕೆ ಸಿದ್ಧಪಡಿಸಲಾಗಿರುವ ಮತದಾರರ ಅಂತಿಮ ಪಟ್ಟಿಯಲ್ಲಿ ಸೇರಿಸಲಾಗಿದೆ. ಪರಿಷ್ಕೃತ ಮತದಾರರ ಪಟ್ಟಿಯ ಪ್ರಕಾರ ರಾಜ್ಯದಲ್ಲಿ 4,96,82,357 ಮತದಾರರಿದ್ದಾರೆ. ಆ ಪೈಕಿ 2,52,05,517 ಪುರುಷ ಮತದಾರರು, 2,44,76,840 ಜನ ಮಹಿಳಾ ಮತದಾರರಿದ್ದಾರೆ ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.