ADVERTISEMENT

ಚೆನ್ನೈ: ಸ್ಟೆರ್‌ಲೈಟ್ ಕಾಪರ್ ಕಂಪನಿ ವಿರುದ್ಧ ಪ್ರತಿಭಟನೆ, ನಾಲ್ವರು ಬಲಿ

ಏಜೆನ್ಸೀಸ್
Published 22 ಮೇ 2018, 12:20 IST
Last Updated 22 ಮೇ 2018, 12:20 IST
ಚೆನ್ನೈ: ಸ್ಟೆರ್‌ಲೈಟ್ ಕಾಪರ್ ಕಂಪನಿ ವಿರುದ್ಧ ಪ್ರತಿಭಟನೆ, ನಾಲ್ವರು  ಬಲಿ
ಚೆನ್ನೈ: ಸ್ಟೆರ್‌ಲೈಟ್ ಕಾಪರ್ ಕಂಪನಿ ವಿರುದ್ಧ ಪ್ರತಿಭಟನೆ, ನಾಲ್ವರು ಬಲಿ   

ಚೆನ್ನೈ: ಇಲ್ಲಿನ ತೂತುಕುಡಿಯಲ್ಲಿರುವ ಸ್ಟೆರ್‌ಲೈಟ್ ಕಾಪರ್ ಕಂಪನಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ 100ನೇ ದಿನಕ್ಕೆ ಕಾಲಿಟ್ಟಿದ್ದು, ಹಿಂಸಾ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಪೊಲೀಸರ ಗುಂಡೇಟಿಗೆ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಬಲಿಯಾಗಿದ್ದಾರೆ.

ಗಾಯಗೊಂಡ 20ಕ್ಕೂ ಹೆಚ್ಚು ಪ್ರತಿಭಟನಾಕಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ದ್ವಿಚಕ್ರ ವಾಹನಗಳು, 2 ಪೊಲೀಸ್ ಜೀಪ್‌ಗಳಿಗೆ ಪ್ರತಿಭಟನಕಾರರು ಬೆಂಕಿ ಹಚ್ಚಿದ್ದಾರೆ. ಇನ್ನಷ್ಟು ವಾಹನಗಳು ಜಖಂಗೊಂಡಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸ್ಟೆರ್‌ಲೈಟ್ ಕಾಪರ್ ಕಂಪನಿಯಿಂದ ಹೊರಬರುತ್ತಿರುವ ವಿಷಪೂರಿತ ಹೊಗೆಯಿಂದಾಗಿ ಪರಿಸರಕ್ಕೆ ಹಾನಿಯಾಗುತ್ತಿದೆ. ಹಾಗಾಗಿ ಕಂಪೆನಿಯನ್ನು ಶಾಶ್ವತವಾಗಿ ಮುಚ್ಚಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ತೂತುಕುಡಿಯಲ್ಲಿನ ಸ್ಥಳೀಯರು ಪ್ರತಿಭಟನೆ ಕೈಗೊಂಡಿದ್ದರು.

ADVERTISEMENT

ಪ್ರತಿಭಟನಾ ಜಾಥಾ ಜಿಲ್ಲಾಧಿಕಾರಿ ಕಚೇರಿ ಬಳಿ ತೆರಳುತ್ತಿದ್ದಂತೆ, ಪ್ರತಿಭಟನಾಕಾರರು ಕಿಟಕಿಗೆ ಕಲ್ಲೆಸೆದು ತಮ್ಮ ಆಕ್ರೋಶ ಹೊರಹಾಕಿದರು. ಆಗ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುತ್ತಿದ್ದಂತೆ ಉದ್ರಿಕ್ತ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು ಹಾಗೂ ಲಾಠಿ ಚಾರ್ಜ್ ನಡೆಸಿದರು.

ನಗರದ ಹಲವೆಡೆ ಪೊಲೀಸರು ಕಟ್ಟೆಚ್ಚರ ಕೈಗೊಂಡಿದ್ದು, 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಸ್ಥಳದಲ್ಲಿ 2000 ಕ್ಕೂ ಹೆಚ್ಚು ಪೊಲೀಸರು ಬೀಡು ಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.