ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಪಾಕಿಸ್ತಾನ ಸೇನೆಗೆ ಭಾರತ ತಾಕೀತು ಮಾಡಿದೆ.
ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರ ಜತೆ ಭಾರತದ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಶುಕ್ರವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಗಡಿ ನಿಯಂತ್ರಣ ರೇಖೆ ಬಳಿ ಅಶಾಂತಿ ಸೃಷ್ಟಿಯಾಗಿದ್ದು, ಇದಕ್ಕೆ ನೀಡುವ ಕುಮ್ಮಕ್ಕನ್ನು ತಕ್ಷಣವೇ ಪಾಕಿಸ್ತಾನ ನಿಲ್ಲಿಸಬೇಕು ಎಂದು ಮಾತುಕತೆ ವೇಳೆ ಚೌಹಾಣ್ ಹೇಳಿದ್ದಾರೆ ಎನ್ನಲಾಗಿದೆ.
ಭಾರತೀಯ ಪಡೆಗಳು ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿವೆ ಎಂದು ಪಾಕಿಸ್ತಾನ ಶುಕ್ರವಾರ ಆರೋಪಿಸಿತ್ತು. ಅಲ್ಲದೆ ಮಾತುಕತೆಗೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ದೂರವಾಣಿ ಮೂಲಕ ಮಾತುಕತೆ ನಡೆಸಲಾಯಿತು.
‘ಶಸ್ತ್ರಧಾರಿ ಉಗ್ರರಿಗೆ ಭಾರತದ ಗಡಿ ನುಸುಳಲು ನೆರವು ನೀಡುವುದಕ್ಕೋಸ್ಕರ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಭಾರತೀಯ ಸೇನೆ ಇದಕ್ಕೆ ಪ್ರತ್ಯುತ್ತರವನ್ನಷ್ಟೇ ನೀಡಿದೆ’ ಎಂದು ಸೇನೆ ಹೇಳಿದೆ.
ಪಾಕಿಸ್ತಾನ ಸೇನೆ ಉಗ್ರರಿಗೆ ನೆರವು ನೀಡುವುದನ್ನು ಸಹಿಸಲಾಗದು. ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಸೇನೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಚೌಹಾಣ್ ಪಾಕಿಸ್ತಾನಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.