ADVERTISEMENT

ಜಯಾ ತಗಾದೆ

ಕಾವೇರಿ: ಸುಪ್ರೀಂ ಕೋರ್ಟ್‌ಗೆ ಮೊರೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2016, 19:30 IST
Last Updated 18 ಆಗಸ್ಟ್ 2016, 19:30 IST
ಜಯಾ ತಗಾದೆ
ಜಯಾ ತಗಾದೆ   

ಚೆನ್ನೈ: ಕಾವೇರಿ ನ್ಯಾಯಮಂಡಳಿಯ ಅಂತಿಮ ಆದೇಶದ ಪ್ರಕಾರ ತಮಿಳುನಾಡಿಗೆ ಕರ್ನಾಟಕ ಬಿಡಬೇಕಿರುವ ಕಾವೇರಿ ನದಿ ನೀರಿನ ಪಾಲನ್ನು ಪಡೆದುಕೊಳ್ಳಲು ಸುಪ್ರೀಂ ಕೋರ್ಟ್‌ಗೆ ದೂರು ಸಲ್ಲಿಸಲಾಗುವುದು ಎಂದು ತಮಿಳುನಾಡು ಸರ್ಕಾರ ಹೇಳಿದೆ.

‘ಒಂದೆರಡು ದಿನದಲ್ಲಿ ದೂರು ನೀಡಲಾಗುವುದು. ಅಗತ್ಯ ಆದೇಶವನ್ನು ಸುಪ್ರೀಂ ಕೋರ್ಟ್‌ನಿಂದ ಪಡೆದುಕೊಳ್ಳಲಾಗುವುದು. ಕರ್ನಾಟಕದಿಂದ ನಮ್ಮ ಪಾಲಿನ ನೀರನ್ನು ಪಡೆದುಕೊಳ್ಳುವ ವಿಶ್ವಾಸ ಇದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಅಲ್ಲಿನ ವಿಧಾನಸಭೆಗೆ ತಿಳಿಸಿದ್ದಾರೆ.

ಮೆಟ್ಟೂರು ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ. ಹಾಗಾಗಿ ಜೂನ್‌ 12ರಂದು ಕೃಷಿಗೆ ಬಿಡಬೇಕಿದ್ದ ನೀರು ಬಿಡಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ನ್ಯಾಯಮಂಡಳಿ ಆದೇಶ ಪ್ರಕಾರ ಜೂನ್‌ ಮತ್ತು ಜುಲೈ ತಿಂಗಳಲ್ಲಿ ಬಿಡಬೇಕಿದ್ದ ನೀರನ್ನು ಕರ್ನಾಟಕ ಬಿಟ್ಟಿಲ್ಲ. ಕಾವೇರಿ ನೀರು ಬಿಡುವಂತೆ ಕರ್ನಾಟಕ ಮತ್ತು ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಕಾವೇರಿಗೆ ಸಂಬಂಧಿಸಿದ ಎರಡು ವಿಚಾರಗಳಲ್ಲಿ ತಮಿಳುನಾಡಿನ ಹಿತ ಕಾಪಾಡಲು ತಾವು ಬದ್ಧ ಎಂದು ಅವರು ತಿಳಿಸಿದ್ದಾರೆ. ನೆರೆಯ ರಾಜ್ಯದಿಂದ ತಮ್ಮ ಪಾಲಿನ ನೀರನ್ನು ಖಂಡಿತ ಪಡೆದುಕೊಳ್ಳಲಾಗುವುದು. ಹಾಗೆಯೇ ಮೇಕೆದಾಟಿನಲ್ಲಿ ಅಣೆಕಟ್ಟೆ ನಿರ್ಮಾಣಕ್ಕೆ ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ. ಇವು ಎರಡು ತಮ್ಮ ಮುಖ್ಯ ಕಾರ್ಯಸೂಚಿ ಎಂದು ಜಯಲಲಿತಾ ತಿಳಿಸಿದ್ದಾರೆ.

ಮೇಕೆದಾಟಿನಲ್ಲಿ ಅಣೆಕಟ್ಟೆ ನಿರ್ಮಿಸುವುದಾಗಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ನಂತರ ಈ ಬಗ್ಗೆ ತಮಿಳುನಾಡು ವಿರೋಧ ಪಕ್ಷಗಳು ಸರ್ಕಾರದ ಮೇಲೆ ಒತ್ತಡ ಹೇರಲಾರಂಭಿಸಿವೆ.

ಮೇಕೆದಾಟಿನಲ್ಲಿ ಅಣೆಕಟ್ಟೆ ನಿರ್ಮಿಸುವ ಕರ್ನಾಟಕದ ನಿರ್ಧಾರದ ಬಗ್ಗೆ ತಮಿಳುನಾಡು ರೈತರು ಚಿಂತಿತರಾಗಿದ್ದಾರೆ ಎಂದು ಜಯಲಲಿತಾ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡಿದ್ದ ಕರ್ನಾಟಕ, ನ್ಯಾಯಾಲಯಕ್ಕೆ ತಿಳಿಸದೆ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವುದಿಲ್ಲ ಎಂದು ಭರವಸೆ ನೀಡಿತ್ತು. ಪತ್ರದಲ್ಲಿಯೂ ಇದನ್ನು ಕರ್ನಾಟಕ ದೃಢಪಡಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹೇಳಿದ್ದಾರೆ.

ಒಂದು ವೇಳೆ, ಕರ್ನಾಟಕ ಸರ್ಕಾರ ಅಣೆಕಟ್ಟೆ ನಿರ್ಮಾಣಕ್ಕೆ ಮುಂದಾದರೆ ತಮಿಳುನಾಡು ರೈತರ ಹಿತರಕ್ಷಣೆಗೆ ಬೇಕಾದ ಎಲ್ಲ ಕ್ರಮ ಕೈಗೊಳ್ಳಲು ತಮ್ಮ ಸರ್ಕಾರ ಸಿದ್ಧ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT