ADVERTISEMENT

ಜರ್ಮನ್ ಬೇಕರಿ ಸ್ಫೋಟ ಪ್ರಕರಣದ ಆರೋಪಿಗೆ ಮರಣ ದಂಡನೆ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2013, 13:34 IST
Last Updated 18 ಏಪ್ರಿಲ್ 2013, 13:34 IST

​ಪುಣೆ (ಐಎಎನ್‌ಎಸ್): ಜರ್ಮನ್ ಬೇಕರಿ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಏಕೈಕ ಭಯೋತ್ಪಾದಕ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಹಿಮಾಯತ್ ಬೇಗ್‌ಗೆ ಇಲ್ಲಿನ ಸೆಷನ್ ನ್ಯಾಯಾಲಯವು ಗುರುವಾರ ಮರಣ ದಂಡನೆ ಶಿಕ್ಷೆ ವಿಧಿಸಿತು.

17 ಜನರು ಸತ್ತು, 64 ಜನರು ಗಾಯಗೊಂಡಿದ್ದ ಈ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಬೇಗ್ ವಿರುದ್ಧ ಹೊರಿಸಲಾಗಿದ್ದ ಕೊಲೆ, ಕ್ರಿಮಿನಲ್ ಸಂಚು ಮತ್ತು ಇತರ ಆಪಾದನೆಗಳು ಸಾಬೀತಾಗಿವೆ ಎಂದು ಹೇಳಿ ಹೆಚ್ಚುವರಿ ಸೆಷನ್ ನ್ಯಾಯಾಧೀಶ ಎನ್. ಪಿ. ಧೋತೆ ಅವರು ಮೂರು ದಿನಗಳ ಹಿಂದೆಯಷ್ಟೇ ಬೇಗ್‌ ಅಪರಾಧಿ ಎಂದು ತೀರ್ಪು ನೀಡಿದ್ದರು.

2010ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಏಳು ಭಯೋತ್ಪಾದಕರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಅವರ ಪೈಕಿ ಬೇಗ್‌ನನ್ನು ಮಾತ್ರ ಬಂಧಿಸಲಾಗಿದೆ. ಇತರ  ಭಯೋತ್ಪಾದಕರಾದ ಯಾಸಿನ್ ಭಟ್ಕಳ್, ಇಕ್ಬಾಲ್ ಭಟ್ಕಳ್, ಮೊಹಿಸಿನ್ ಚೌಧರಿ, ರಿಯಾಜ್ ಭಟ್ಕಳ್ ಮತ್ತು ಫಯಾಜ್ ತಲೆ ಮರೆಸಿಕೊಂಡಿದ್ದಾರೆ. 

ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳವು (ಎಟಿಎಸ್) ಬೇಗ್‌ನನ್ನು ಬೀಡ್ ಜಿಲ್ಲೆಯ ಉದ್‌ಗಿರ್‌ನಲ್ಲಿ 2010ರ ಸೆಪ್ಟೆಂಬರ್ 7ರಂದು ಬಂಧಿಸಿತ್ತು. ಇತರ ಆರು ಮಂದಿ ಜತೆ ಸೇರಿಕೊಂಡು ಬೇಗ್ ಕ್ರಿಮಿನಲ್ ಸಂಚು ನಡೆಸಿ ಬಾಂಬ್ ಸ್ಫೋಟ ನಡೆಸಿದ್ದ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT