ಚೆನ್ನೈ: ತಮಿಳುನಾಡಿನಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಯ ಬಿಸಿ ಗುರುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೂ ತಟ್ಟಿದೆ.
ಇಲ್ಲಿ ನಡೆಯುತ್ತಿರುವ ಡಿಫೆನ್ಸ್ ಎಕ್ಸ್ಪೋ 2018ಕ್ಕೆ ಚಾಲನೆ ನೀಡಲು ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಪ್ರತಿಭಟನೆಯ ಸ್ವಾಗತ ದೊರೆತಿದೆ.
ಚೆನ್ನೈ ವಿಮಾನ ನಿಲ್ದಾಣದ ಹೊರಗೆ ಮತ್ತು ಮೋದಿ ತೆರಳುತ್ತಿದ್ದ ರಸ್ತೆಯ ಮಾರ್ಗದಲ್ಲಿ ಸಾವಿರಾರು ಜನ ಪ್ರತಿಭಟನಾಕಾರರು ಕಪ್ಪು ಬಾವುಟ, ಕಪ್ಪು ಬಲೂನ್ ಪ್ರದರ್ಶನ ಮಾಡಿದರು. ’ಮೋದಿಗೆ ದಿಕ್ಕಾರ’, ’ಗೊ ಬ್ಯಾಕ್ ಮೋದಿ’ ಎಂಬ ಘೋಷಣೆಗಳನ್ನು ಕೂಗಿದರು.
ಡಿಎಂಕೆ ಮತ್ತು ಮಿತ್ರ ಪಕ್ಷಗಳ ಕಾರ್ಯಕರ್ತರು ಕೂಡ ಕಪ್ಪು ಬಾವುಟ ಪ್ರದರ್ಶನ ಮಾಡಿದರು. ಡಿಎಂಕೆ ಪಕ್ಷದ ನಾಯಕರ ಮನೆಗಳ ಮೇಲೂ ಕಪ್ಪು ಬಾವುಟಗಳನ್ನು ಹಾರಿಸಲಾಗಿತ್ತು. ’ಹಾರುತ್ತಿರುವ ಕಪ್ಪು ಬಾವುಟಗಳು ನಮ್ಮ ಭಾವನೆಗಳನ್ನು ಬಿಂಬಿಸುತ್ತಿವೆ, ಜನರು ತಮ್ಮ ಮನೆಗಳ ಮೇಲೆ ಕಪ್ಪು ಬಾವುಟಗಳನ್ನು ಹಾರಿಸಿದ್ದಾರೆ, ನೀವು ಈಗಲಾದರೂ ಎಚ್ಚೆತ್ತುಕೊಂಡು ಸುಪ್ರೀಂ ಕೋರ್ಟ್ನಲ್ಲಿರುವ ಅರ್ಜಿಯನ್ನು ವಾಪಾಸು ಪಡೆಯಿರಿ, ಇಲ್ಲವಾದಲ್ಲಿ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಡಿಎಂಕೆ ನಾಯಕ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.
ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಪ್ರತಿಭಟನಾಕಾರರು ವಿಮಾನ ನಿಲ್ದಾಣದ ಹೊರಗೆ ಕೇಂದ್ರ ಸರ್ಕಾರ ಮತ್ತು ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ವಿಮಾನ ನಿಲ್ದಾಣ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದು ಬಂಧಿಸಿದರು.
ಸಿನಿಮಾ ನಿರ್ದೇಶಕ ಭಾರತಿರಾಜ್, ಅಮೀರ್ ಮತ್ತು ಗೌತಮ್ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನಾಕಾರರಿಗೆ ಸಾಥ್ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.