ADVERTISEMENT

ತನಿಖೆಗೆ ಮೇಲ್ನೋಟದ ಸಾಕ್ಷ್ಯಗಳು ಬೇಕು

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2017, 19:30 IST
Last Updated 12 ಅಕ್ಟೋಬರ್ 2017, 19:30 IST

ನವದೆಹಲಿ: ‘ಯಾರೊಬ್ಬರ ವಿರುದ್ಧ ತನಿಖೆ ನಡೆಸಬೇಕು ಎಂದರೆ ಅವರು ತಪ್ಪು ಮಾಡಿರುವ ಬಗ್ಗೆ ಮೇಲ್ನೋಟಕ್ಕೆ ಸಾಕ್ಷ್ಯಗಳು ಇರಬೇಕು’ ಎಂದು ಆರ್‌ಎಸ್‌ಎಸ್‌ ಇದೇ ಮೊದಲ ಬಾರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಅವರ ಪುತ್ರ ಜಯ್‌ ಷಾ ಅವರ ವಹಿವಾಟು ವಿವಾದದ ಬಗ್ಗೆ ಪ್ರತಿಕ್ರಿಯಿಸಿದೆ.

ಭೋಪಾಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಆರ್‌ಎಸ್‌ಎಸ್‌ ಸಹ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ‘ಯಾವುದೇ ವ್ಯಕ್ತಿ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿಬಂದರೆ, ಅವರ ವಿರುದ್ಧ ತನಿಖೆ ನಡೆಸಬೇಕು. ಆದರೆ, ತಪ್ಪು ಮಾಡಿರುವ ಬಗ್ಗೆ ಮೇಲ್ನೋಟಕ್ಕೆ ಪುರಾವೆಗಳು ಇರಬೇಕು’ ಎಂದು ಅವರು ಹೇಳಿದ್ದಾರೆ.

ಷಾ ಪುತ್ರನ ಪ್ರಕರಣದ ಬಗ್ಗೆ ಅಭಿಪ್ರಾಯ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ಆರೋಪ ಮಾಡಿದವರು ಅವುಗಳನ್ನು ಸಾಬೀತು ಮಾಡಬೇಕು’ ಎಂದು ಹೇಳಿದ್ದಾರೆ.

ADVERTISEMENT

2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜಯ್‌ ಷಾ ಅವರ ಸಂಸ್ಥೆಯ ವರಮಾನ 1600 ಪಟ್ಟು ಹೆಚ್ಚಾಗಿದೆ ಎಂದು ‘ದಿ ವೈರ್‌’ ಎಂಬ ಆನ್‌ಲೈನ್‌ ಮಾಧ್ಯಮ ವರದಿ ಮಾಡಿತ್ತು. ಈ ಮಾಧ್ಯಮದ ವಿರುದ್ಧ ಜಯ್‌ ಷಾ ಕ್ರಿಮಿನಲ್‌ ಪ್ರಕರಣ ದಾಖಲಿಸಿರುವುದರ ಜೊತೆಗೆ ₹100 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಗುಜರಾತ್‌ನಲ್ಲಿ ನಡೆಯಲಿರುವ ಚುನಾವಣೆಗೂ ಮುಂಚಿತವಾಗಿ ಈ ವರದಿಯು ಕಾಂಗ್ರೆಸ್‌ಗೆ ಹೆಚ್ಚಿನ ಬಲ ತಂದುಕೊಟ್ಟಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಹುದ್ದೆಯಿಂದ ಅಮಿತ್‌ ಷಾ ಇಳಿಯಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.