ADVERTISEMENT

ತರಳಬಾಳು ಹುಣ್ಣಿಮೆ: ಮಹಾಮಂಟಪಕ್ಕೆ ಭೂಮಿಪೂಜೆ Ver.4

​ಪ್ರಜಾವಾಣಿ ವಾರ್ತೆ
Published 20 ಜನವರಿ 2011, 13:10 IST
Last Updated 20 ಜನವರಿ 2011, 13:10 IST

ಬೆಂಗಳೂರು: ‘ಸರ್ವಧರ್ಮ ಸೌಹಾರ್ದತೆ, ರಾಷ್ಟ್ರೀಯ ಭಾವೈಕ್ಯತೆ ಹಾಗೂ ವಿಶ್ವ ಭ್ರಾತೃತ್ವ ಸಾಧಿಸುವ ನಿಟ್ಟಿನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಯತ್ನಿಸುತ್ತಿದೆ’ ಎಂದು ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಫೆಬ್ರುವರಿ 10ರಿಂದ ಆರಂಭವಾಗಲಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ಮಹಾಮಂಟಪ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ತರಳಬಾಳು ಹುಣ್ಣಿಮೆ ಮಹೋತ್ಸವದ ಮೂಲಪುರುಷ ವಿಶ್ವಬಂಧು ಮರುಳಸಿದ್ಧ ಜನ್ಮತಃ ಹರಿಜನನಾಗಿದ್ದು 12ನೇ ಶತಮಾನದ ಜಾತೀಯತೆ, ಮೂಢನಂಬಿಕೆ, ಶೋಷಣೆ, ಅಸಮಾನತೆಯ ವಿರುದ್ಧ ಬಂಡೆದ್ದವನು. ತರಳಬಾಳು ಹುಣ್ಣಿಮೆ ಇದ್ದಕ್ಕೆ ಪೂರಕವಾಗಿದೆ’ ಎಂದು ಹೇಳಿದರು.

ಬೇಲಿಮಠದ ಶಿವರುದ್ರ ಸ್ವಾಮೀಜಿ ಮಾತನಾಡಿ ‘ದೈನಂದಿನ ಜೀವನದಲ್ಲಿ ನೆಮ್ಮದಿ ಕಳೆದುಕೊಂಡು ಪರಿತಪಿಸುತ್ತಿರುವ ಜನತೆಯ ಮನಸ್ಸಿಗೆ ತರಳಬಾಳು ಹುಣ್ಣಿಮೆ ಆಶಾಕಿರಣವಾಗಿದೆ. ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಮಾತನಾಡಿ ‘ರಾಜ್ಯದ ಧಾರ್ಮಿಕ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ವೀರಶೈವ ಮಠಗಳ ಕೊಡುಗೆ ಅಪಾರವಾಗಿದೆ. ತರಳಬಾಳು ಮಠ ಗ್ರಾಮೀಣ ಪ್ರದೇಶದಲ್ಲಿ ಅನೇಕ ಉತ್ತಮ ಕಾರ್ಯಗಳನ್ನು ಹಮ್ಮಿಕೊಂಡಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಾವಣಗೆರೆ ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ್, ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ವಿಧಾನಸಭೆ ಮಾಜಿ ಸಭಾಧ್ಯಕ್ಷ ಬಿ.ಜಿ.ಬಣಕಾರ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್.ದಯಾಶಂಕರ್ ಮಾತನಾಡಿದರು.

ತರಳಬಾಳು ಕೇಂದ್ರದ ಕಾರ್ಯದರ್ಶಿ ಡಾ.ಎಸ್.ಸಿದ್ದಯ್ಯ, ವಸತಿ ಸಚಿವ ವಿ.ಸೋಮಣ್ಣ, ಶಾಸಕರಾದ ಡಿ.ಎಸ್.ಸುರೇಶ್, ಡಾ.ವಿಶ್ವನಾಥ್, ತರಳಬಾಳು ಕೇಂದ್ರದ ಕಾರ್ಯದರ್ಶಿ ಡಾ. ಎಸ್.ಸಿದ್ದಯ್ಯ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.