ADVERTISEMENT

ಥೇನ್: ಮುಂದುವರಿದ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2012, 19:30 IST
Last Updated 2 ಜನವರಿ 2012, 19:30 IST

ಕಡಲೂರು (ತಮಿಳುನಾಡು) (ಪಿಟಿಐ): ಮೂರು ದಿನಗಳ ನಂತರ ಕೊನೆಗೊಂಡ `ಥೇನ್~ ಚಂಡಮಾರುತದಿಂದ ತೀವ್ರವಾಗಿ ಹಾನಿಗೊಂಡಿರುವ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಮತ್ತು ತಮಿಳುನಾಡಿನ ಕಡಲೂರಿನಲ್ಲಿ ಪರಿಹಾರ ಕಾರ್ಯಾಚರಣೆಗಾಗಿ ಸುಮಾರು 2 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಮುಂದುವರಿದಿದೆ.

ಮುರಿದು ಬಿದ್ದಿರುವ ವಿದ್ಯುತ್ ಕಂಬಗಳು, ಮರಗಳನ್ನು ನಿವಾರಿಸಲು ಭಾನುವಾರದಿಂದಲೇ ಕ್ರಮ ಕೈಗೊಂಡಿರುವ ಜಿಲ್ಲಾಡಳಿತಕ್ಕೆ ಇದೊಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಚಂಡಮಾರುತದಿಂದ ಹಾನಿಗೊಂಡಿರುವ ರಸ್ತೆಗಳು, ಸಾರ್ವಜನಿಕ ಕಟ್ಟಡಗಳು, ಕಾಲುವೆಗಳನ್ನು ಸರಿ ಸ್ಥಿತಿಗೆ ತರುವ ಪ್ರಯತ್ನಗಳು ನಡೆಯುತ್ತಿವೆ.

ಕುಡಿಯುವ ನೀರು, ಹಾಲು ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳ ಪೂರೈಕೆ ಸಾಮಾನ್ಯ ಸ್ಥಿತಿಗೆ ಬಂದಿದೆ. ಆದರೂ ಸಂಪೂರ್ಣ ಪರಿಹಾರ ಕಾರ್ಯ ಮುಗಿಯಲು ಇನ್ನೂ ಹತ್ತು ದಿನಗಳಾಗಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.

ರಾಜ್ಯ, ಜಿಲ್ಲಾ ಹೆದ್ದಾರಿಗಳು ಮತ್ತು ಕಾಲುವೆಗಳಿಗೆ ಆಗಿರುವ ಹಾನಿ ಸರಿಪಡಿಸಲು 300.25 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗಾಗಿ ಐವರು ಐಎಎಸ್ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.