ನವದೆಹಲಿ: ದೆಹಲಿ ಪೊಲೀಸ್ ವಿಶೇಷ ಘಟಕ ಶನಿವಾರ ನಡೆಸಿದ ಎನ್ಕೌಂಟರ್ನಲ್ಲಿ ನಾಲ್ಕು ಮಂದಿ ಕ್ರಿಮಿನಲ್ಗಳು ಸಾವಿಗೀಡಾಗಿದ್ದು, ಕೆಲವು ಪೊಲೀಸರು ಗಾಯಗೊಂಡಿದ್ದಾರೆ.
ಕಾರಿನಲ್ಲಿ ತೆರೆಳುತ್ತಿದ್ದ ರಾಜೇಶ್ ಭಾರ್ತಿ ಗ್ಯಾಂಗ್ ಮೇಲೆ ದೆಹಲಿ ದಕ್ಷಿಣ ಭಾಗದ ಫತೇಹ್ಪುರ್ ಬೆರಿಯ ಗ್ರಾಮವೊಂದರ ಸಮೀಪ ಪೊಲೀಸರು ಎನ್ಕೌಂಟರ್ ನಡೆಸಿದ್ದಾರೆ. ಪೊಲೀಸ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಗ್ಯಾಂಗ್ನ ಸದಸ್ಯರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೂ ಮುನ್ನವೇ ರಾಜೇಶ್ ಭಾರ್ತಿ ಸೇರಿ ನಾಲ್ಕು ಮಂದಿ ಮೃತಪಟ್ಟಿದ್ದಾಗಿ ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.
ಎನ್ಕೌಂಟರ್ ವೇಳೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ರಾಜೇಶ್ ಭಾರತಿ ಹರಿಯಾಣ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ. ಈತನ ಬಂಧನಕ್ಕಾಗಿ ₹1 ಲಕ್ಷ ಬಹುಮಾನ ಘೋಷಿಸಲಾಗಿತ್ತು.
ಗ್ಯಾಂಗ್ನ್ನು ಸುತ್ತುವರಿದ ಪೊಲೀಸರು ಶರಣಗಾಗುವಂತೆ ಸೂಚಿಸಿದ್ದಾರೆ. ಆದರೆ, ಗ್ಯಾಂಗ್ನ ಸದಸ್ಯರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 35 ಸುತ್ತುಗಳ ಗುಂಡಿನ ಚಕಮಕಿಯಲ್ಲಿ ನಾಲ್ಕು ಮಂದಿ ಪೊಲೀಸರೂ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ರಾಜೇಶ್ ಭಾರ್ತಿ ಗ್ಯಾಂಗ್ ಪ್ರಯಾಣಿಸುತ್ತಿದ್ದ ಫೋರ್ಡ್ ಎಂಡೆವರ್ ಕಾರ್ನಿಂದ ಪರವಾನಗಿ ಇರದ ಸೆಮಿ ಆಟೋಮ್ಯಾಟಿಕ್ ಪಿಸ್ತೂಲ್ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.