ADVERTISEMENT

ದೌರ್ಜನ್ಯ ತಡೆ ಕಾಯ್ದೆ ಕುರಿತ ಸುಪ್ರೀಂಕೋರ್ಟ್‌ ತೀರ್ಪು ಕೇಂದ್ರ ಸರ್ಕಾರ ಮೇಲ್ಮನವಿ?

ಪಿಟಿಐ
Published 22 ಮಾರ್ಚ್ 2018, 20:43 IST
Last Updated 22 ಮಾರ್ಚ್ 2018, 20:43 IST

ನವದೆಹಲಿ: ಎಸ್‌ಸಿ/ಎಸ್‌ಟಿ (ದೌರ್ಜನ್ಯ ನಿಯಂತ್ರಣ) ಕಾಯ್ದೆಯ ಕುರಿತು ಮಂಗಳವಾರ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಅಮಾಯಕ ನಾಗರಿಕರನ್ನು ಮತ್ತು ಸರ್ಕಾರಿ ಅಧಿಕಾರಿಗಳನ್ನು ಬೆದರಿಸಲು ಈ ಕಾಯ್ದೆ ಬಳಕೆಯಾಗುತ್ತಿರುವುದನ್ನು ಗಮನಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಅಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಕ್ತಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಯಾವುದೇ ಸರ್ಕಾರಿ ನೌಕರರು ಅಥವಾ ವ್ಯಕ್ತಿಗಳ ವಿರುದ್ಧ ದೂರು ದಾಖಲಾದರೆ ತಕ್ಷಣಕ್ಕೆ ಅವರನ್ನು ಬಂಧಿಸಕೂಡದು ಎಂದು ಮಾರ್ಗಸೂಚಿ ಹೊರಡಿಸಿತ್ತು.

ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸುವಂತೆ ಬಿಜೆಪಿಯ ದಲಿತ ಸಮುದಾಯಗಳ ಸಂಸದರು ಮತ್ತು ಮಿತ್ರಪಕ್ಷಗಳು ಮೋದಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದು ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಎನ್‌ಡಿಎ ಸರ್ಕಾರದ ಭಾಗವಾಗಿರುವ ಲೋಕ ಜನಶಕ್ತಿ ಪಕ್ಷ ಘೋಷಿಸಿದೆ.

ದಲಿತ ಸಂಸದರ ಒಂದು ನಿಯೋಗ ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಅವರನ್ನು ಭೇಟಿಯಾಗಿ ತೀರ್ಪಿನ ಕುರಿತು ಆತಂಕ ವ್ಯಕ್ತಪಡಿಸಿದ್ದು, ಸುಪ್ರೀಂ ಕೋರ್ಟ್‌ ಮೊರೆ ಹೋಗುವಂತೆ ಮನವಿ ಮಾಡಿದೆ.

‘ದೇಶದಾದ್ಯಂತ ಇರುವ ಎಸ್‌ಸಿ, ಎಸ್‌ಟಿ ಸಮುದಾಯದವರು ಈ ತೀರ್ಪಿನ ವಿರುದ್ಧ ಆಕ್ರೋಶ ವೈಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಪುನರ್‌ಪರಿಶೀಲನಾ ಅರ್ಜಿ ಸಲ್ಲಸಲೇಬೇಕು’ ಎಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಆಗ್ರಹಿಸಿದ್ದಾರೆ.

ಸಿಪಿಐ ಆಗ್ರಹ: ಪರಿಶಿಷ್ಟ ಜಾತಿ ಹಾಗೂ ಪಂಗಡ ಕಾಯ್ದೆಯ (ಎಸ್‌ಸಿ–ಎಸ್‌ಟಿ) ಅಡಿಯಲ್ಲಿ ದೂರು ದಾಖಲಾದ ತಕ್ಷಣವೇ ಬಂಧಿಸಬಾರದು ಎಂದು ಸುಪ್ರೀಂಕೋರ್ಟ್‌ ತೀರ್ಪಿನ ಕುರಿತು ಕೇಂದ್ರ ಸರ್ಕಾರ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಸಿಪಿಐ ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.