
ನವದೆಹಲಿ (ಪಿಟಿಐ): ಪ್ರಜಾಪ್ರಭುತ್ವದಲ್ಲಿ ನಕ್ಸಲೀಯ ಹಿಂಸಾಚಾರಕ್ಕೆ ಅವಕಾಶವಿಲ್ಲ. ಮಾವೋವಾದಿಗಳ ಹಿಂಸಾಚಾರವನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯಗಳು ಪರಸ್ಪರ ಕೈಜೋಡಿಸಬೇಕು ಎಂದು ಪ್ರಧಾನಿ ಮನಮೋಹನ್ ಸಿಂಗ್ ಬುಧವಾರ ಇಲ್ಲಿ ಕರೆ ನೀಡಿದರು.
ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಇಲ್ಲಿ ನಡೆದ ಮುಖ್ಯಮಂತ್ರಿಗಳ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
'ಪ್ರಜಾಪ್ರಭುತ್ವದಲ್ಲಿ ನಕ್ಸಲೀಯ ಹಿಂಸಾಚಾರಕ್ಕೆ ಸ್ಥಾನವಿಲ್ಲ. ಸಂವಿಧಾನದ ಚೌಕಟ್ಟಿನೊಳಗೆಯೇ ಎಲ್ಲ ಉಗ್ರಗಾಮಿ ಗುಂಪುಗಳ ಜೊತೆಗೂ ಮಾತುಕತೆ ನಡೆಸಲು ಸರ್ಕಾರ ಬಯಸಿದೆ' ಎಂದು ಅವರು ನುಡಿದರು.
2012ರಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತೆಯಲ್ಲಿ ಮಹತ್ವದ ಸುಧಾರಣೆಯಾಗಿದೆ ಎಂದು ಅವರು ಹೇಳಿದರು.
ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ನಿಟ್ಟಿನಲ್ಲಿ ಸಾಂಸ್ಥಿಕ ವ್ಯವಸ್ಥೆಯೊಂದನ್ನು ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕರಿಸಬೇಕು ಎಂದೂ ಅವರು ನುಡಿದರು.
ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮಾತನಾಡಿ ಪಂಜಾಬಿನಲ್ಲಿ ಸಿಖ್ ಉಗ್ರವಾದದ ಪುನಶ್ಚೇತನಕ್ಕೆ ಐಎಸ್ಐ ಪ್ರಯತ್ನಿಸುತ್ತಿದೆ ಎಂದು ಆಪಾದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.