ನವದೆಹಲಿ: ನಗರದೊಳಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ಡಿನೋಟಿಫೈ ಮಾಡಲು ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಿ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದ್ದು, ನಿಷೇಧಕ್ಕೆ ಒಳಪಟ್ಟಿದ್ದ ನಗರ ವಲಯದ ಪಬ್ಗಳು ನಿಟ್ಟುಸಿರುವ ಬಿಟ್ಟಿವೆ.
ಸುಪ್ರೀಂ ಕೋರ್ಟ್ ಹಿಂದಿನ ಆದೇಶದಂತೆ ರಾಷ್ಟ್ರೀಯ ಹೆದ್ದಾರಿ ಸಮೀಪದ 500 ಮೀಟರ್ ವ್ಯಾಪ್ತಿಯಲ್ಲಿನ ಮದ್ಯದಂಗಡಿಗಳನ್ನು ಮುಚ್ಚಲಾಗಿದೆ. ಇದೀಗ ನಗರ ಹಾಗೂ ಪಟ್ಟಣದೊಳಗೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ಡಿನೋಟಿಫೈ ಮಾಡಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ವೇಗವಾಗಿ ವಾಹನ ಸಂಚಾರ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕರು ಮದ್ಯದ ಪ್ರಭಾವಕ್ಕೆ ಒಳಗಾಗಬಾರದು ಎನ್ನುವ ಕಾರಣದಿಂದ ಈ ಹಿಂದಿನ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೋರ್ಟ್ ತಿಳಿಸಿದೆ.
ಬೆಂಗಳೂರು, ಚಂಡೀಗಢ ಸೇರಿದಂತೆ ನಗರ ವ್ಯಾಪ್ತಿಯೊಳಗಿನ ಮದ್ಯದಂಗಡಿಗಳ ಪುನರಾರಂಭಕ್ಕೆ ಕೋರ್ಟ್ ಆದೇಶ ಸಹಕಾರಿಯಾಗಲಿದೆ. ಬೆಂಗಳೂರಿನ 78 ಕಿ.ಮೀ. ವ್ಯಾಪ್ತಿ ಆರು ರಾಷ್ಟ್ರೀಯ ಹೆದ್ದಾರಿಯ ಭಾಗವಾಗಿದ್ದು, ಎಂ.ಜಿ ರಸ್ತೆ, ಬಳ್ಳಾರಿ ರಸ್ತೆ, ಹೊಸೂರು ರಸ್ತೆಯಲ್ಲಿನ ಪ್ರಮುಖ ಸ್ಟಾರ್ ಹೊಟೇಲ್ಗಳೂ ಸಹ ಇದರ ವ್ಯಾಪ್ತಿಯಲ್ಲಿವೆ.
858 ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಅಧಿಸೂಚನೆ ವ್ಯಾಪ್ತಿಯಿಂದ ಕೈಬಿಡುವಂತೆ ಕೇಂದ್ರ ಭೂಸಾರಿಗೆ ಸಚಿವಾಲಯದ ಮೇಲೆ ಒತ್ತಡ ಹೇರಲು ದೆಹಲಿಗೆ ಹೋಗಿದ್ದ ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ ಹಾಗೂ ಕಾರ್ಯದರ್ಶಿ ಸಿದ್ದಗಂಗಪ್ಪ ಬರಿಗೈಯಲ್ಲಿ ಬೆಂಗಳೂರಿಗೆ ಹಿಂತಿರುಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.