ಮಂಬೈ: ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ದೇಶಕ ಮಧುರ್ ಭಂಡಾರ್ಕರ್ ಅವರು ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ, ‘ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.
ಭಂಡಾರ್ಕರ್ ನಿರ್ದೇಶನದ ‘ಇಂದು ಸರ್ಕಾರ್’ ಸಿನಿಮಾ ತೆರೆಗೆ ಬರಲು ಸಿದ್ಧತೆ ನಡೆಸಿದೆ. ಆದರೆ, ಚಿತ್ರದಲ್ಲಿ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕಾಲದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿ ಸಂದರ್ಭದ ಕುರಿತು ಋಣಾತ್ಮಕವಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸೋಮವಾರ ನಾಗ್ಪುರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಗೆ ಪಕ್ಷದ ಕಾರ್ಯಕರ್ತರು ಅಡ್ಡಿ ಪಡಿಸಿದ್ದು, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಇದರಿಂದ ಬೇಸರಗೊಂಡಿರುವ ನಿರ್ದೇಶಕ, ರಾಹುಲ್ ಗಾಂಧಿಯವರ ಕಚೇರಿ ಟ್ವಿಟರ್ ಖಾತೆಯನ್ನು ಟ್ಯಾಗ್ ಮಾಡಿ, ‘ಪುಣೆ ಘಟನೆ ಬಳಿಕ ಇದೀಗ ನಾಗ್ಪುರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನೂ ರದ್ದು ಪಡಿಸಲಾಗಿದೆ. ನೀವು ಈ ಗೂಂಡಾಗಿರಿಯನ್ನು ಒಪ್ಪುತ್ತೀರಾ? ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವೇ?’ ಎಂದು ಟ್ವೀಟ್ ಮಾಡುವ ಮೂಲಕ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.