ನವದೆಹಲಿ: ‘ನಿರ್ಭಯಾ’ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ದೆಹಲಿ ಹೈ ಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ತಪ್ಪಿತಸ್ಥರಿಗೆ ಮರಣದಂಡನೆ ಖಾಯಂಗೊಳಿಸಿ ತೀರ್ಪು ಪ್ರಕಟಿಸಿದೆ.
2012ರಲ್ಲಿ ನಡೆದ ‘ನಿರ್ಭಯಾ’ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳು ಸಲ್ಲಿಸಿರುವ ವಿಶೇಷ ಮೇಲ್ಮನವಿಯ ತೀರ್ಪನ್ನು ಶುಕ್ರವಾರ ಸುಪ್ರೀಂಕೋರ್ಟ್ ಪ್ರಕಟಿಸಿತು.
ಅಪರಾಧಿಗಳಾದ ಮುಖೇಶ್, ಪವನ್, ವಿನಯ್ ಶರ್ಮಾ ಮತ್ತು ಅಕ್ಷಯ ಕುಮಾರ್ ಸಿಂಗ್ ಈ ನಾಲ್ವರಿಗೆ ದೆಹಲಿಗೆ ಹೈಕೋರ್ಟ್ 2014ರಂದು ಮರಣದಂಡನೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಆರೋಪಿಗಳು ಸುಪ್ರೀಂಕೋರ್ಟ್ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ಇದರ ತೀರ್ಪನ್ನು ಕೋರ್ಟ್ ಕಳೆದ ಮಾರ್ಚ್ನಲ್ಲಿ ಕಾಯ್ದಿರಿಸಿತ್ತು.
ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ನಾಲ್ವರು ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ನೀಡಿದ್ದ ಮರಣದಂಡನೆಯನ್ನು ಎತ್ತಿ ಹಿಡಿದು, ಶಿಕ್ಷೆಯನ್ನು ಖಾಯಂಗೊಳಿಸಿತು.
2012ರ ಡಿಸೆಂಬರ್ 16ರಂದು 23 ವರ್ಷ ವಯಸ್ಸಿನ ಫಿಜಿಯೊಥೆರಪಿಸ್ಟ್ ವಿದ್ಯಾರ್ಥಿನಿ ಮೇಲೆ ಚಲಿಸುವ ಬಸ್ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು.
ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಡಿಸೆಂಬರ್ 29ರಂದು ವಿದ್ಯಾರ್ಥಿನಿ ಕೊನೆಯುಸಿ ರೆಳೆದಿದ್ದರು.
ಪ್ರಕರಣದ ಪ್ರಮುಖ ಆರೋಪಿ ರಾಮ್ ಸಿಂಗ್ 2013ರ ಮಾರ್ಚ್ನಲ್ಲಿ ತಿಹಾರ್ ಜೈಲಿನಲ್ಲಿ ಮೃತಪಟ್ಟಿದ್ದಾನೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.