ನವದೆಹಲಿ: ರಾಜ್ಯ ಹೈಕೋರ್ಟ್ನಲ್ಲಿ ಖಾಲಿ ಇರುವ ನ್ಯಾಯಮೂರ್ತಿ ಹುದ್ದೆಗಳ ಶೀಘ್ರ ನೇಮಕಕ್ಕೆ ಸಂಬಂಧಿಸಿದಂತೆ ಗಮನ ಹರಿಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿ ಸೂಚಿಸಿತು.
ನ್ಯಾಯಮೂರ್ತಿಗಳ ತ್ವರಿತ ನೇಮಕ ಕೋರಿ ವಕೀಲ ಪಿ.ಪಿ. ಹೆಗ್ಡೆ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಆರಂಭದಲ್ಲಿ ನಿರಾಕರಿಸಿದ ಸಿ.ಜೆ ದೀಪಕ್ ಮಿಶ್ರಾ ನೇತೃತ್ವದ ಪೀಠ, 12 ವಾರಗಳ ನಂತರ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಹೇಳಿತು.
ದೇಶದ ಒಟ್ಟು 9 ರಾಜ್ಯಗಳಲ್ಲಿನ ಹೈಕೋರ್ಟ್ಗಳಲ್ಲಿ ಖಾಲಿ ಇರುವ ನ್ಯಾಯಮೂರ್ತಿ ಹುದ್ದೆಗಳ ನೇಮಕದ ವಿಷಯವು ಸುಪ್ರೀಂ ಕೋರ್ಟ್
ಕೊಲಿಜಿಯಂನ ಪರಿಗಣನೆಯಲ್ಲಿದೆ ಎಂದು ನ್ಯಾಯಮೂರ್ತಿಗಳಾದ ಎ.ಎಂ. ಖನ್ವಿಲ್ಕರ್ ಹಾಗೂ ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠ ತಿಳಿಸಿತು.
ರಾಜ್ಯ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಗಳ 62 ಮಂಜೂರಾದ ಹುದ್ದೆಗಳಿವೆ. ಆದರೆ, ಕೇವಲ 25 ಜನ ನ್ಯಾಯಮೂರ್ತಿಗಳು ಸೇವೆಯಲ್ಲಿದ್ದಾರೆ. ಶೇ 60ರಷ್ಟು ಹುದ್ದೆಗಳು ಖಾಲಿ ಇರುವುದರಿಂದ ನ್ಯಾಯದಾನ ಬಯಸಿ ಬರುವ ಸಾರ್ವಜನಿಕರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತಿದೆ ಎಂದು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜು ರಾಮಚಂದ್ರನ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.