ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಗಲಭೆಯಲ್ಲಿ ಮೂವರು ಮೃತಪಟ್ಟ ಘಟನೆ ಸಂಬಂಧಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕೇಂದ್ರ ಗೃಹ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಲಾಗಿದ್ದು, ಘಟನೆ ಸಂಬಂಧ ವರದಿ ನೀಡುವಂತೆ ತಿಳಿಸಿದೆ.
ಅಮಿತ್ ಶಾ ಗೃಹಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಈ ಸಂದೇಶ ರವಾನಿಸಲಾಗಿದೆ.ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ತೀರಾ ಹದೆಗೆಟ್ಟಿದ್ದು, ನಿಯಂತ್ರಣಕ್ಕೆ ತರದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದೆ. ರಾಜಕೀಯ ವೈಷಮ್ಯದಿಂದ ಪಶ್ಚಿಮಬಂಗಾಳದ ಉತ್ತರ 24 ಪರಗಣಾ ಜಿಲ್ಲೆಯ ಬಾಸಿರಾತ್ನ ಧನಿಪಾರ ಗ್ರಾಮದಲ್ಲಿ ನಡೆದ ಗಲಭೆಯಲ್ಲಿ ಬಿಜೆಪಿಯ ಇಬ್ಬರು ಕಾರ್ಯಕರ್ತರು ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಒಬ್ಬರು ಮೃತಪಟ್ಟಿದ್ದಾರೆ.
ಈ ಘಟನೆ ಕುರಿತು ಸಂದೇಶದಲ್ಲಿ ಪ್ರಸ್ತಾಪಿಸಲಾಗಿದ್ದು, ಚುನಾವಣೆ ಮುಗಿದ ನಂತರವೂ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಆ ಸರ್ಕಾರದ ಆಡಳಿತ ವೈಫಲ್ಯವಾಗಿರುವುದಲ್ಲದೆ,ಕಾನೂನು ಮತ್ತು ಸುವ್ಯವಸ್ಥೆ ತೀರ ಹದಗೆಟ್ಟಿದೆ ಎಂಬುದನ್ನು ಸೂಚಿಸುತ್ತದೆ. ಈ ವೈಫಲ್ಯಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆಯಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.