ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ(ಪಿಎನ್ಬಿ) ಬಹು ಕೋಟಿ ವಂಚನೆ ಮಾಡಿರುವ ಪ್ರಕರಣದ ಪ್ರಮುಖ ಆರೋಪಿಗಳಾದ ನೀರವ್ ಮೋದಿ ಹಾಗೂ ಮೇಹುಲ್ ಚೋಕ್ಸಿ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ.
ಈ ಸಂಬಂಧ ವಿಶೇಷ ನ್ಯಾಯಾಲಯ ಶನಿವಾರ ಇಬ್ಬರ ವಿರುದ್ಧ ಕ್ರಮಕ್ಕೆ ಈ ಆದೇಶ ಮಾಡಿದೆ.
ವಜ್ರಾಭರಣ ಉದ್ಯಮಿ ನೀರವ್ ಮೋದಿ ಹಾಗೂ ಅವರ ಸಂಬಂಧಿ ಗೀತಾಂಜಲಿ ಜೆಮ್ಸ್ನ ಮೇಹುಲ್ ಚೋಕ್ಸಿ ಅವರ ವಿರುದ್ಧ ಅಕ್ರಮ ಹಣಕಾಸು ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ನೀಡಿದೆ.
ನ್ಯಾಯಾಲಯ ನೀಡಿರುವ ಜಾಮೀನು ರಹಿತ ವಾರಂಟ್ ಬಗ್ಗೆ ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು ಎಂದು ನೀರವ್ ಮೋದಿ ಪರ ವಕೀಲ ವಿಜಯ್ ಅಗರ್ವಾಲ್ ಹೇಳಿದ್ದಾರೆ.
ಪ್ರಕರಣ ಹೊರಬಂದ ಬಳಿಕ ನೀರವ್ ಮೋದಿ ದೇಶದಿಂದ ಪರಾರಿಯಾಗಿದ್ದಾರೆ. ಅವರು ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ಫೈರ್ ಸ್ಟಾರ್ ವಜ್ರಾಭರಣ ಸಂಸ್ಥೆಯ ಐದು ಮಂದಿ ಅಧಿಕಾರಿಗಳನ್ನು ಫೆ.20ರಂದು ಬಂಧಿಸಲಾಗಿತ್ತು. ಈ ಮೂಲಕ, ಪ್ರಸ್ತುತ ಪ್ರಕರಣದಲ್ಲಿ ಒಟ್ಟು 11 ಮಂದಿಯನ್ನು ಬಂಧಿಸಿದಂತಾಗಿದೆ. ಈ ಪೈಕಿ ಮೂವರು, ಪ್ರಕರಣದ ಪ್ರಮುಖ ಆರೋಪಿ ಉದ್ಯಮಿ ನೀರವ್ ಮೋದಿ ಅವರ ಕಂಪನಿ ಜೊತೆ ಸಂಪರ್ಕ ಹೊಂದಿದ್ದು, ಮತ್ತೆ ಮೂವರು ಚೋಕ್ಸಿಯವರ ಗೀತಾಂಜಲಿ ಗ್ರೂಪ್ ಕಂಪನಿಗೆ ಸೇರಿದವರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.