ADVERTISEMENT

ಪೊಲೀಸರಿಂದ ಸುಬ್ರಮಣಿಯನ್ ಸ್ವಾಮಿ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2012, 19:30 IST
Last Updated 16 ಜನವರಿ 2012, 19:30 IST

ನವದೆಹಲಿ (ಪಿಟಿಐ):ದಿನಪತ್ರಿಕೆಯೊಂದರಲ್ಲಿ ಪ್ರಚೋದನಕಾರಿಯಾಗಿ ಲೇಖನ ಬರೆದ ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣಿಯನ್ ಸ್ವಾಮಿ ಅವರನ್ನು ದೆಹಲಿ ಪೊಲೀಸರು ಸೋಮವಾರ ಪ್ರಶ್ನಿಸಿದರು.

ದೆಹಲಿ ಪೊಲೀಸ್ ಇಲಾಖೆಯ ಅಪರಾಧ ವಿಭಾಗದ ಅಂತರರಾಜ್ಯ ಘಟಕಕ್ಕೆ ತಮ್ಮ ವಕೀಲರೊಂದಿಗೆ ಬೆಳಿಗ್ಗೆ ಹನ್ನೊಂದು ಗಂಟೆ ವೇಳೆಯಲ್ಲಿ ಸ್ವಾಮಿ ಆಗಮಿಸಿ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಿದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಸ್ವಾಮಿ ಅವರಿಗೆ ಜನವರಿ 30ರ ವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ, ಇನ್ನು ಮುಂದೆ ಇಂತಹ ಪ್ರಚೋದನಕಾರಿ ಲೇಖನ ಬರೆಯುವುದಿಲ್ಲ ಎಂದು ಪೊಲೀಸರಿಗೆ ಮುಚ್ಚಳಿಕೆ ಬರೆದುಕೊಡುವಂತೆ ಸೂಚಿಸಿತ್ತು. ಸ್ವಾಮಿ ನಿರೀಕ್ಷಣಾ ಜಾಮೀನಿಗೆ ಸಂಬಂಧಿಸಿದ್ದಂತೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು.

ಮುಸ್ಲಿಮರಿಗೆ ಮತದಾನದ ಹಕ್ಕನ್ನು ತೆಗೆದುಹಾಕುವಂತೆ ಸಲಹೆ ಮಾಡಿ ಸ್ವಾಮಿ ಅವರು ಬರೆದ ಲೇಖನದ ಹಿನ್ನೆಲೆಯಲ್ಲಿ ಅಕ್ಟೋಬರ್ 3ರಂದು ದೆಹಲಿ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT