ಹೈದರಾಬಾದ್ (ಪಿಟಿಐ): ಪ್ರತ್ಯೇಕ ತೆಲಂಗಾಣ ರಚನೆಗೆ ಒತ್ತಾಯಿಸಿ ರಾಷ್ಟ್ರೀಯ ತೆಲಂಗಾಣ ಸಮಿತಿ (ಟಿಆರ್ಎಸ್) ಸದಸ್ಯರು ಹಾಗೂ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ ಕಾರಣ ಆಂಧ್ರಪ್ರದೇಶದ ವಿಧಾನಸಭೆಯ ಬಜೆಟ್ ಅಧಿವೇಶನದ ಮೂರನೇ ದಿನವಾದ ಗುರುವಾರವೂ ಕಲಾಪ ಭಂಗಗೊಂಡಿದೆ.
ಸದನದಲ್ಲಿ ಅಧಿವೇಶನ ಆರಂಭವಾಗುತ್ತಿದ್ದಂತೆ ಎದ್ದು ನಿಂತ ಟಿಆರ್ಎಸ್ ಮತ್ತು ಬಿಜೆಪಿ ಸದಸ್ಯರು ಪ್ರತ್ಯೇಕ ತೆಲಂಗಾಣ ರಚಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಸ್ಪೀಕರ್ ಎನ್.ಮನೋಹರ್ ಅವರು ಸುಗಮವಾಗಿ ಕಲಾಪ ನಡೆಯಲು ಸಹಕರಿಸಬೇಕು ಎಂದು ಪ್ರತಿಭಟನಾ ನಿರತ ಸದಸ್ಯರಲ್ಲಿ ಮನವಿ ಮಾಡಿದರು. ಪ್ರತಿಭಟನೆ ಮುಂದುವರಿದಾಗ ಕಲಾಪವನ್ನು ಅರ್ಧ ಗಂಟೆಗಳ ಕಾಲ ಮುಂದೂಡಲಾಯಿತು. ಅರ್ಧ ಗಂಟೆ ನಂತರ ಮತ್ತೆ ಕಲಾಪ ಆರಂಭವಾದಾಗ ಟಿಆರ್ಎಸ್ ಮತ್ತು ಬಿಜೆಪಿ ಶಾಸಕರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಮುಂದುವರಿಸಿದರು.
ಜಾಥಾ: ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಒತ್ತಾಯಿಸಿ ತೆಲಂಗಾಣ ಹೋರಾಟ ಸಮಿತಿ ಸದಸ್ಯರು ಶುಕ್ರವಾರ ಹೈದರಾಬಾದ್ನಲ್ಲಿ `ವಿಧಾನಸಭೆ ಚಲೋ' ಜಾಥಾ ಹಮ್ಮಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.