ನವದೆಹಲಿ (ಪಿಟಿಐ): ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಮುಖ್ಯಸ್ಥ ಕೆ.ಚಂದ್ರಶೇಖರ ರಾವ್ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.
ಭಾನುವಾರ ರಾಜಘಾಟ್ನಲ್ಲಿ ಸತ್ಯಾಗ್ರಹ ನಡೆಸಿದ ರಾವ್, ತೆಲಂಗಾಣ ಜಂಟಿ ಕ್ರಿಯಾ ಸಮಿತಿ ಹಾಗೂ ಇತರ ಬೆಂಬಲಿಗರೊಂದಿಗೆ ಸೋಮವಾರ ಪ್ರಧಾನಿಗಳನ್ನು ಮಾಡಿ ತಮ್ಮ ಬೇಡಿಕೆ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳುವಂತೆ ಆಗ್ರಹಿಸಿದರು.
ಪ್ರತ್ಯೇಕ ರಾಜ್ಯಕ್ಕಾಗಿ ನಡೆಯುತ್ತಿರುವ ಮುಷ್ಕರ 22ನೇ ದಿನಕ್ಕೆ ಕಾಲಿಟ್ಟಿದ್ದು, ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ ಹಾಗೂ ಅಲ್ಲಿ (ತೆಲಂಗಾಣ) ಈಗ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ರಾವ್ ಇದೇ ಸಂದರ್ಭದಲ್ಲಿ ಪ್ರಧಾನಿಗಳ ಗಮನಕ್ಕೆ ತಂದರು.
ಸಂಸದರ ಭೇಟಿ (ಐಎಎನ್ಎಸ್ ವರದಿ): ಚಂದ್ರಶೇಖರ ರಾವ್ ಅವರನ್ನು ಭೇಟಿ ಮಾಡುವ ಒಂದು ಗಂಟೆ ಮೊದಲು ಪ್ರಧಾನಿ ಸಿಂಗ್ ಅವರನ್ನು ತೆಲಂಗಾಣ ಪ್ರಾಂತ್ಯದ ಕಾಂಗ್ರೆಸ್ ಸಂಸದರು, ಶಾಸಕರು ಭೇಟಿ ಮಾಡಿ ಚರ್ಚಿಸಿದರು.
ಸಂಸದರ ನಿಯೋಗಕ್ಕೆ ಪ್ರಧಾನಿಗಳು ಯಾವುದೇ ಆಶ್ವಾಸನೆಯನ್ನೂ ನೀಡಲಿಲ್ಲ. ಸುಮಾರು ಅರ್ಧಗಂಟೆ ನಡೆದ ಈ ಸಭೆಯಲ್ಲಿ, ಪ್ರತ್ಯೇಕ ತೆಲಂಗಾಣಕ್ಕೆ ಸಂಬಂಧಿಸಿದಂತೆ ಕಾಲಮಿತಿಯನ್ನು ನಿಗದಿ ಮಾಡಿ, ಅಷ್ಟರಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವು ಪ್ರಕಟಿಸಬೇಕು ಎಂದು ಸಂಸದರು ಒತ್ತಾಯಿಸಿದರು.
ಸಮಸ್ಯೆಯ ಇತ್ಯರ್ಥಕ್ಕೆ ಕೇಂದ್ರ ಸರ್ಕಾರ ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದು ಎಂದು ಪ್ರಧಾನಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.