ADVERTISEMENT

ಬಂಗಾರು ಲಕ್ಷ್ಮಣ್ ನಿಧನ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2014, 13:21 IST
Last Updated 1 ಮಾರ್ಚ್ 2014, 13:21 IST

ಹೈದರಾಬಾದ್ (ಪಿಟಿಐ): ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಮಾಜಿ ಅಧ್ಯಕ್ಷ ಬಂಗಾರು ಲಕ್ಷ್ಮಣ್  (74) ಅವರು ಶನಿವಾರ ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನ ಹೊಂದಿದರು.

ಖಾಸಗಿ ಆಸ್ಪತ್ರೆಯೊಂದರಲ್ಲಿ ಕಿಡ್ನಿ ಸಂಬಂಧಿ ಕಾಯಿಲೆ ಚಿಕಿತ್ಸೆಗಾಗಿ ದಾಖಲಾಗಿದ್ದ ಲಕ್ಷ್ಮಣ್ ಅವರು ಸಂಜೆ 5 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಲಕ್ಷ್ಮಣ್ ಅವರು ಪತ್ನಿ ಸುಶೀಲಾ, ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಆಂಧ್ರಪ್ರದೇಶದ ದಲಿತ ಕುಟುಂಬವೊಂದರಲ್ಲಿ (17 ಮಾರ್ಚ್ 1939) ಜನಿಸಿದ್ದ ಲಕ್ಷ್ಮಣ್ ಅವರು ಚಿಕ್ಕ ವಯಸ್ಸಿನಲ್ಲಿಯೇ ರಾಜಕೀಯಕ್ಕೆ ಧುಮುಕಿದ್ದರು. 1996ರಲ್ಲಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ ಇವರು ಬಿಜೆಪಿಯ ಮೊದಲ ದಲಿತ ಅಧ್ಯಕ್ಷರಾಗಿದ್ದರು.

1999-2000ನೇ ಸಾಲಿನಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಲಕ್ಷ್ಮಣ್ ಅವರು, 2000-2001ರಲ್ಲಿ ಬಿಜೆಪಿ ಅಧ್ಯಕ್ಷರಾಗಿದ್ದರು.

2001ರಲ್ಲಿ ಮಾರುವೇಷದ ಶಸ್ತ್ರಾಸ್ತ್ರ ದಲ್ಲಾಳಿಯಿಂದ ಒಂದು ಲಕ್ಷ ರೂಪಾಯಿ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಅವರಿಗೆ ದೆಹಲಿ ಹೈಕೋರ್ಟ್ 2012ರಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಲಕ್ಷ್ಮಣ್ ಅವರ ನಿಧನಕ್ಕೆ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಸೇರಿದಂತೆ ಪಕ್ಷದ ಹಲವು ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT