ಲಖನೌ (ಪಿಟಿಐ): ಲಖಿಂಪುರ ಜಿಲ್ಲೆಯ ಪೊಲೀಸ್ ಠಾಣೆಯೊಂದರ ಆವರಣದಲ್ಲಿ ಹದಿ ಹರೆಯದ ಬಾಲಕಿಯೊಬ್ಬಳು ಅತ್ಯಾಚಾರಕ್ಕೀಡಾಗಿ, ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಉತ್ತರ ಪ್ರದೇಶ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಬಿ-ಸಿಐಡಿಗೆ ವಹಿಸಿದೆ. ಮತ್ತು ಬಾಲಕಿಯ ಶವವನ್ನು ಮರು ಪರೀಕ್ಷೆ ನಡೆಸುವಂತೆ ಆದೇಶಿಸಿದೆ.
ಬಾಲಕಿ ಹತ್ಯೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ರಾಜ್ಯ ಸರ್ಕಾರವು ಈ ಮೊದಲು ನಡೆಸಿದ್ದ ಶವಪರೀಕ್ಷೆಯ ವರದಿಯನ್ನು ತಳ್ಳಿ ಹಾಕಿತು. ಮತ್ತು ಬೇರೆ ಜಿಲ್ಲೆಗಳ ವೈದ್ಯರ ತಂಡವು ಮತ್ತೆ ಶವದ ಪರೀಕ್ಷೆ ನಡೆಸುವಂತೆ ಆದೇಶಿಸಿತು.
ಉಸಿರುಕಟ್ಟಿದ್ದರಿಂದ ಬಾಲಕಿ ಮೃತಪಟ್ಟಿದ್ದಳು ಎಂದು ಮೊದಲು ನಡೆಸಿದ್ದ ಶವಪರೀಕ್ಷೆಯ ವರದಿ ತಿಳಿಸಿತ್ತು. ಸಾಕ್ಷ್ಯವನ್ನು ತಿದ್ದಲು ಯತ್ನಿಸಿದ್ದಕ್ಕಾಗಿ ಸಬ್ ಇನ್ಸ್ಪೆಕ್ಟರ್, ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಮಧ್ಯೆ, ಬಾಲಕಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.