ADVERTISEMENT

ಬಾಲಕೃಷ್ಣನ್ ಮೇಲಿನ ದೂರಿನ ಸ್ಥಿತಿಗತಿ ತಿಳಿಸಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2011, 17:20 IST
Last Updated 18 ಫೆಬ್ರುವರಿ 2011, 17:20 IST

ನವದೆಹಲಿ (ಪಿಟಿಐ): ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಮತ್ತು ಮಾಜಿ ಮುಖ್ಯ ನಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪದ ಬಗ್ಗೆ ಸಿಬಿಐ ತನಿಖೆ ಕೋರಿ ಕಳೆದ ಮೇನಲ್ಲಿ ಸಲ್ಲಿಸಲಾದ ದೂರಿನ ಸ್ಥಿತಿಗತಿ ಕುರಿತು ಇನ್ನು ಎರಡು ವಾರಗಳಲ್ಲಿ ತನಗೆ ವಿವರಣೆ ಸಲ್ಲಿಸುವಂತೆ ಅಟಾರ್ನಿ ಜನರಲ್ ಜಿ.ಇ. ವಹನ್ವತಿ ಅವರಿಗೆ ಸುಪ್ರೀಂಕೋರ್ಟ್ ಶುಕ್ರವಾರ ಸೂಚಿಸಿದೆ.

ಕೇಂದ್ರ ಗೃಹ ಸಚಿವಾಲಯಕ್ಕೆ ಹಸ್ತಾಂತರ ಮಾಡಿರುವ ಈ ದೂರಿನ ಸ್ಥಾನಮಾನ ಏನು ಎಂಬುದನ್ನು ವಿವರಿಸುವಂತೆ ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯ ನೇತೃತ್ವದ ನ್ಯಾಯಪೀಠ ಸೂಚಿಸಿದೆ.

ಬಾಲಕೃಷ್ಣನ್ ಮತ್ತು ಅವರ ಕುಟುಂಬ ಸದಸ್ಯರ ಅಕ್ರಮ ಆಸ್ತಿಗಳ ಬಗ್ಗೆ ಸಿಬಿಐ ತನಿಖೆ ಕೋರಿ ದೆಹಲಿ ಮೂಲದ ಪತ್ರಕರ್ತರೊಬ್ಬರು ಕಳೆದ ಮೇ 5ರಂದು ಉಪರಾಷ್ಟ್ರಪತಿ ಅವರಿಗೆ ದೂರು ಸಲ್ಲಿಸಿದ್ದು, ಇದನ್ನು ಗೃಹ ಸಚಿವಾಲಯಕ್ಕೆ ಕಳುಹಿಸಿರುವುದನ್ನು ಪ್ರಸ್ತಾಪಿಸಿದ ಪೀಠ, ಈ ಕುರಿತು ಅಟಾರ್ನಿ ಜನರಲ್ ಅವರಿಂದ ಸೂಕ್ತ ಉತ್ತರ ಬರುವ ತನಕ ಪ್ರಕರಣದ ವಿಚಾರಣೆಯನ್ನು ಮುಂದೂಡಿತು.

ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನಾಯಮೂರ್ತಿಯವರ ಅಕ್ರಮ ಆಸ್ತಿ ಸಂಪಾದನೆ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ಕೋರಿ ವಕೀಲ ಎಂ.ಎಲ್. ಶರ್ಮ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.