ಚೆನ್ನೈ : ಮಾಜಿ ಪ್ರಧಾನಿ ರಾಜೀವಗಾಂಧಿ ಅವರ ಹಂತಕಿ ನಳಿನಿ ಶ್ರೀಹರನ್, ಅವಧಿಗೂ ಮುನ್ನ ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾ ಮಾಡಿದೆ.
ನಳಿನಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾಳೆ. ಕ್ಷಮಾದಾನ ನೀಡಲು ರಾಜ್ಯಪಾಲರಿಗೆ ಇರುವ ಅಧಿಕಾರದ ಅಡಿ ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಈಕೆ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯಪೀಠ 2014ರಲ್ಲಿ ವಜಾ ಮಾಡಿತ್ತು. ಸುಪ್ರೀಂಕೋರ್ಟ್ನಲ್ಲಿ ಕೂಡ ಇದೇ ಪ್ರಕರಣ ಇತ್ಯರ್ಥಕ್ಕೆ ಬಾಕಿ ಇರುವ ಬಗ್ಗೆ ಸರ್ಕಾರ ಆಗ ಕೋರ್ಟ್ ಗಮನಕ್ಕೆ ತಂದಿತ್ತು. ಆದ್ದರಿಂದ ಅಲ್ಲಿಯೇ ಪ್ರಕರಣ ಬಗೆಹರಿಯಲಿ ಎಂದು ಕೋರ್ಟ್ ಹೇಳಿತ್ತು.
ಇದನ್ನು ಪ್ರಶ್ನಿಸಿ ಈಗ ನಳಿನಿ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದಳು. ಈ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ.ಕೆ.ಶಶಿಧರನ್ ನೇತೃತ್ವದ ವಿಭಾಗೀಯ ಪೀಠ ಮಾನ್ಯ ಮಾಡಲಿಲ್ಲ. ‘ಏಕಸದಸ್ಯ ಪೀಠ ಹೇಳಿರುವುದಕ್ಕೆ ನಮ್ಮ ಸಮ್ಮತಿ ಇದೆ. ಸುಪ್ರೀಂಕೋರ್ಟ್ ಇದರ ಬಗ್ಗೆ ತೀರ್ಪು ನೀಡಲಿ’ ಎಂದು ಪೀಠ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.