ನವದೆಹಲಿ (ಪಿಟಿಐ): ಅತ್ಯಾಚಾರ ಪ್ರಕರಣವೊಂದರ ಆರೋಪ ಎದುರಿಸುತ್ತಿರುವ ಬಾಲಿವುಡ್ ನಿರ್ದೇಶಕ ಮಧುರ್ ಭಂಡಾರ್ಕರ್ ಮೇಲಿನ ಅಪರಾಧ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಭಂಡಾರ್ಕರ್ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಎಲ್. ದತ್ತು ಮತ್ತು ಸಿ.ಕೆ. ಪ್ರಸಾದ್ ಅವರನ್ನು ಒಳಗೊಂಡ ಪೀಠವು ಈ ತಡೆಯಾಜ್ಞೆ ನೀಡಿದ್ದು, ಆರೋಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಮಹಾರಾಷ್ಟ್ರ ಸರ್ಕಾರ ಹಾಗೂ ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿದೆ.
ಬಾಲಿವುಡ್ ನಟಿ ಪ್ರೀತಿ ಜೈನ್ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರೆಂಬ ಆರೋಪ ಮಧುರ್ ಭಂಡಾರ್ಕರ್ ಮೇಲಿದೆ. ಈ ಸಂಬಂಧ ತಮ್ಮನ್ನು ವಿಚಾರಣೆಗೆ ಒಳಪಡಿಸುವಂತೆ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಭಂಡಾರ್ಕರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
2004ರ ಜುಲೈನಲ್ಲಿ ವೆರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸ್ದ್ದಿದರು. 1999ರಿಂದ 2004ರ ಅವಧಿಯಲ್ಲಿ ಭಂಡಾರ್ಕರ್ ತಮ್ಮ ಮೇಲೆ 16 ಬಾರಿ ಅತ್ಯಾಚಾರ ಎಸಗಿದ್ದರು ಎಂದು ದೂರಿನಲ್ಲಿ ನಟಿ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.