ಚೆನ್ನೈ /ಕಡಲೂರು (ಪಿಟಿಐ ): ತಮಿಳುನಾಡಿನ ನೆವೆಲಿ ಲಿಗ್ನೈಟ್ ಕಾರ್ಪೊರೇಷನ್ ಘಟಕದಲ್ಲಿ ಸೋಮವಾರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ಗುಂಡಿಗೆ ಗುತ್ತಿಗೆ ಕಾರ್ಮಿಕನೊಬ್ಬ ಬಲಿಯಾಗಿದ್ದಾನೆ.
ಪರವಾನಗಿ ಇಲ್ಲದೆ ನೆವೆಲಿ ಲಿಗ್ನೈಟ್ ಕಾರ್ಪೊರೇಶನ್ನ ಗಣಿ ಪ್ರವೇಶಿಸಲು ಮುಂದಾದ ಗುತ್ತಿಗೆ ಕಾರ್ಮಿಕರನ್ನು ಸಿಐಎಸ್ಎಫ್ ಸಿಬ್ಬಂದಿ ತಡೆದಾಗ ಇಬ್ಬರ ಮಧ್ಯೆ ವಾಗ್ವಾದ ಆರಂಭವಾಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಸಿಐಎಸ್ಎಫ್ ಸಿಬ್ಬಂದಿ ಹಾರಿಸಿದ ಗುಂಡಿಗೆ ಕಾರ್ಮಿಕರ ಗುಂಪಿನ ಮುಖಂಡ ಟಿ. ಸುರೇಶ್ (31) ಎಂಬಾತ ಸ್ಥಳದಲ್ಲಿಯೇ ಮೃತಪಟ್ಟ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಸಿಐಎಸ್ಎಫ್ ಸಿಬ್ಬಂದಿ ಮತ್ತು ನೆವೆಲಿ ಲಿಗ್ನೈಟ್ ಕಾರ್ಪೊರೇಶನ್ ಕಚೇರಿ ಮೇಲೆ ಬಾರಿ ದಾಳಿ ನಡೆಸಿ ಪ್ರವೇಶ ದ್ವಾರಗಳನ್ನು ಧ್ವಂಸಗೊಳಿಸಿದ್ದಾರೆ.
ಉದ್ರಿಕ್ತ ಗುಂಪು ಸಿಐಎಸ್ಎಫ್ ಸಿಬ್ಬಂದಿ ಮತ್ತು ಸಂಸ್ಥೆಯ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ನಡೆಸಿ ಮತ್ತು ಅಶ್ರುವಾಯು ಪ್ರಯೋಗಿಸಿದರು.
ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದರೂ, ಇನ್ನೂ ತ್ವೇಷಮಯ ವಾತಾವರಣವಿದೆ. ಮುಂಜಾಗ್ರತಾ ಕ್ರಮವಾಗಿ ಘಟನಾ ಸ್ಥಳ ಮತ್ತು ಸುತ್ತಲಿನ ಗ್ರಾಮದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಈ ಘಟನೆಯಲ್ಲಿ 20 ಕಾರ್ಮಿಕರು ಮತ್ತು ಮೂವರು ಸಿಐಎಸ್ಎಫ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಸಂಸ್ಥೆಯ ಆಸ್ಪತ್ರೆಗೆ ಸೇರಿಸಲಾಗಿದೆ.
ಗುಂಡು ಹಾರಿಸಿದ ಸಿಐಎಸ್ಎಫ್ ಸಿಬ್ಬಂದಿಯನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಬಂಧಿತನನ್ನು 15 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನೆಯ ವಿವರ ಪಡೆದ ಜಿಲ್ಲಾಧಿಕಾರಿ ತನಿಖೆ ನಡೆಸಿ ವರದಿ ನೀಡುವಂತೆ ಉಪ ವಿಭಾಗಾಧಿಕಾರಿಗೆ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.