ADVERTISEMENT

ಭ್ರಷ್ಟಾಚಾರ ಆರೋಪ ರಾಜಕೀಯ ಪ್ರೇರಿತ: ತೇಜಸ್ವಿ ಯಾದವ್

ಏಜೆನ್ಸೀಸ್
Published 12 ಜುಲೈ 2017, 9:34 IST
Last Updated 12 ಜುಲೈ 2017, 9:34 IST
ಭ್ರಷ್ಟಾಚಾರ ಆರೋಪ ರಾಜಕೀಯ ಪ್ರೇರಿತ: ತೇಜಸ್ವಿ ಯಾದವ್
ಭ್ರಷ್ಟಾಚಾರ ಆರೋಪ ರಾಜಕೀಯ ಪ್ರೇರಿತ: ತೇಜಸ್ವಿ ಯಾದವ್   

ಪಟ್ನಾ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ‘ನನ್ನ ವಿರುದ್ಧದ ಆರೋಪ ರಾಜಕೀಯ ಪ್ರೇರಿತ. 2004ರಲ್ಲಿ ಅಕ್ರಮವಾಗಿ ಆಸ್ತಿ ಗಳಿಸಿದ್ದೇನೆ ಎಂದು ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಆಗಿನ್ನೂ ನನಗೆ 14–15 ವರ್ಷ ವಯಸ್ಸು. ಮೀಸೆಯೂ ಬಂದಿರಲಿಲ್ಲ. ಆ ವಯಸ್ಸಿನಲ್ಲಿ ನಾನು ಅಂಥ ಚಟುವಟಿಕೆಯಲ್ಲಿ ಹೇಗೆ ತೊಡಗಿರಲು ಸಾಧ್ಯ? ಇದೆಲ್ಲ ಪ್ರಧಾನಿ ಮೋದಿ ಹಾಗೂ ಅಮಿತ್‌ ಷಾ ನನ್ನ ವಿರುದ್ಧ ಹೂಡಿರುವ ರಾಜಕೀಯ ಸಂಚು’ ಎಂದು ಆರೋಪಿಸಿದ್ದಾರೆ.

‘ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲೇ ನಾನು ಸ್ಪಷ್ಟಪಡಿಸಿದ್ದೆ. ನನ್ನ ಅಧೀನದಲ್ಲಿರುವ ಮೂರು ಇಲಾಖೆಗಳಲ್ಲಿ ಯಾವುದಾದರಲ್ಲಾದರೂ ಭ್ರಷ್ಟಾಚಾರ ಆರೋಪ ಕೇಳಿಬಂದಿದೆಯೇ’ ಎಂದು ಅವರು ಪ್ರಶ್ನಿಸಿದ್ದಾರೆ.

ADVERTISEMENT

ರಾಜೀನಾಮೆ ನೀಡುವುದಿಲ್ಲವೆಂದು ಸುಳಿವು ನೀಡಿದ ತೇಜಸ್ವಿ, ಬಿಜೆಪಿಯ ಸಂಚಿನ ವಿರುದ್ಧ ಜನರ ಬಳಿ ತೆರಳುವುದಾಗಿ ತಿಳಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಕುಟುಂಬದವರ ನಿವಾಸಗಳ, ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಈ ಬಗ್ಗೆ ವಿವರಣೆ ನೀಡುವಂತೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಡಳಿತಾರೂಢ ಮಿತ್ರ ಪಕ್ಷ ಆರ್‌ಜೆಡಿಗೆ ಸೂಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.