ADVERTISEMENT

ಮತ್ತೆ ಕಾವೇರಿದ ತೆಲಂಗಾಣ ಹೋರಾಟ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2011, 19:30 IST
Last Updated 19 ಸೆಪ್ಟೆಂಬರ್ 2011, 19:30 IST

ಹೈದರಾಬಾದ್ (ಐಎಎನ್‌ಎಸ್/ ಪಿಟಿಐ): ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಉಸ್ಮಾನಿಯ ವಿಶ್ವವಿದ್ಯಾಲಯ ಮತ್ತು ನಿಜಾಂ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಸೋಮವಾರ ಘರ್ಷಣೆ ನಡೆಯಿತು.

ಪ್ರತಿಭಟನಾ ರ‌್ಯಾಲಿಗೆ ಪೊಲೀಸರು ತಡೆಯೊಡ್ಡಿದಾಗ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಿದರು. ಇದಕ್ಕೆ ಪ್ರತಿಯಾಗಿ ಪೊಲೀಸರು ಅಶ್ರುವಾಯು ಷೆಲ್ ಪ್ರಯೋಗಿಸಿ ಗುಂಪು ಚದುರಿಸಿದರು.  ನಿಜಾಂ ಕಾಲೇಜಿನ ಆವರಣ ಪ್ರವೇಶಿಸಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಪ್ರತಿಭಟನಾಕಾರರು ನಿಜಾಂ ಕಾಲೇಜನ್ನು ಬಂದ್ ಮಾಡಿಸಿ, ರ‌್ಯಾಲಿಯಲ್ಲಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸಿದ್ದು ಘರ್ಷಣೆಗೆ ಕಾರಣವಾಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಅಲ್ಲದೆ, ಸರ್ಕಾರಿ ಸ್ವಾಮ್ಯದ ರಸ್ತೆ ಸಾರಿಗೆ  ನಿಗಮದ 54 ಸಾವಿರಕ್ಕೂ ಹೆಚ್ಚು ನೌಕರರು ಈ ಅನಿರ್ದಿಷ್ಟ ಅವಧಿಯ ಪ್ರತಿಭಟನೆಯಲ್ಲಿ ಪಾಲ್ಗೊಂಡು, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆತಡೆ ನಡೆಸಿದರು. ರಸ್ತೆಗಳಲ್ಲಿ ತಾತ್ಕಾಲಿಕ ಗೋಡೆಗಳನ್ನು ನಿರ್ಮಿಸಲಾಗಿತ್ತಲ್ಲದೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿತ್ತು. ಇದರಿಂದ ಇತರ ಪ್ರದೇಶಗಳಿಗೆ ಮಾತ್ರವಲ್ಲದೆ ನೆರೆಯ ರಾಜ್ಯಗಳಾದ, ಕರ್ನಾಟಕ, ಮಹಾರಾಷ್ಟ್ರಗಳ ರಸ್ತೆ ಸಂಪರ್ಕಕ್ಕೂ ತೀವ್ರ ಧಕ್ಕೆ ಉಂಟಾಯಿತು.

ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಯುತ್ತಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.