ಭೋಪಾಲ್ (ಪಿಟಿಐ): ಮಳೆಯಿಂದಾಗಿ ಬೆಳೆನಷ್ಟಕ್ಕೀಡಾಗಿರುವ ರೈತರ ಕುರಿತು ಕೇಂದ್ರ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ಸಂಪುಟದ ಸಚಿವರೊಂದಿಗೆ ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದರು.
ಅಕಾಲಿಕ ಆಲಿಕಲ್ಲು ಮಳೆಯಿಂದ ತತ್ತರಿಸಿರುವ ರೈತರ ಸಮಸ್ಯೆಗಳ ನಿವಾರಣೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಗುರುವಾರ ಮಧ್ಯಾಹ್ನ 2 ಗಂಟೆ ತನಕ ಬಂದ್ಗೆ ಕರೆ ನೀಡಿತ್ತು. ಬಂದ್ಗೆ ಬೆಂಬಲ ಸೂಚಿಸಿ ಮುಖ್ಯಮಂತ್ರಿ ಹಾಗೂ ಸಚಿವರು ನಾಲ್ಕು ಗಂಟೆಗಳ ಕಾಲ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡರು.
ರೈತರ ಸಮಸ್ಯೆಗಳ ನಿವಾರಣೆಗೆ ಕೇಂದ್ರ ಸರ್ಕಾರ ರೂ. 5 ಸಾವಿರ ಕೋಟಿ ಮೊತ್ತದ ವಿಶೇಷ ಪ್ಯಾಕೇಜ್ ನೀಡಬೇಕೆಂದು ಒತ್ತಾಯಿಸಿದ ಚೌಹಾಣ್, ಸಂಪುಟದ ಎಲ್ಲಾ ಸಚಿವರು ದೆಹಲಿಗೆ ತೆರಳಿಗೆ ಕೇಂದ್ರ ಸರ್ಕಾರಕ್ಕೆ ರಾಜ್ಯದ ರೈತರ ಸ್ಥಿತಿಯನ್ನು ಮನವರಿಕೆ ಮಾಡಿಕೊಡುವುದಾಗಿ ತಿಳಿಸಿದರು.
ಬೆಳೆ ನಷ್ಟದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ಈಗಾಗಲೇ ರಾಜ್ಯ ಸರ್ಕಾರದಿಂದ ರೂ. 2 ಸಾವಿರ ಕೋಟಿ ಮೊತ್ತದ ಪರಿಹಾರ ನೀಡುವ ಕುರಿತು ಚಿಂತನೆ ನಡೆಸಲಾಗಿದೆ. ಇದು ಕೇವಲ ಆರಂಭವಷ್ಟೇ. ಎಲ್ಲಾ ರೈತರಿಗೂ ಸೂಕ್ತ ಪರಿಹಾರ ಕಲ್ಪಿಸಲು ನಾವು ಕ್ರಮಗಳನ್ನು ಕೈಗೊಳ್ಳುತ್ತೇವೆ. ಇಲ್ಲಿನ ಹೊಸ ಮಾರುಕಟ್ಟೆ ಬಳಿ ರೈತರ ಪರ ಪ್ರತಿಭಟನೆ ನಡೆಸುತ್ತಿದ್ದಾಗ ವಿವಿಧ ಸಂಘ–ಸಂಸ್ಥೆಗಳು ಮತ್ತು ಸಾರ್ವಜನಿಕರು ರೂ. 7.42 ಕೋಟಿ ದೇಣಿಗೆ ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಇಂಥ ಸಮಯದಲ್ಲಿ ಪರಿಹಾರ ಒದಗಿಸಲು ‘ಶಾಶ್ವತ ರಾಷ್ಟ್ರೀಯ ಪರಿಹಾರ ವಿಪತ್ತು ನಿಧಿ’ ಸ್ಥಾಪಿಸಬೇಕು ಹಾಗೂ ಸಾರ್ವಜನಿಕರು ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ ಹೆಚ್ಚಿನ ಸಂಖ್ಯೆಯಲ್ಲಿ ದೇಣಿಗೆ ನೀಡಬೇಕೆಂದು ಚೌಹಾಣ್ ಕೋರಿದರು.
ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡುವ ವಿಷಯದಲ್ಲಿ ಕಾಂಗ್ರೆಸ್ ಆಸಕ್ತಿ ತೋರುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ ಚೌಹಾಣ್, ರೈತರ ಸಂಕಷ್ಟಗಳಿಗೆ ಕಾಂಗ್ರೆಸ್ ನಾಯಕರು ಸೂಕ್ಷ್ಮವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.