ಸೆಹೋರ್: ಸಾಲ ಮನ್ನಾ ಮತ್ತು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುವಂತೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ತವರು ಜಿಲ್ಲೆ ಸೆಹೋರ್ನಲ್ಲಿ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದುಲ್ಚಂದ್ ಕೀರ್(55) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ರೆಹ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ರೈತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಸುದಾಮ್ ಖಾಡೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
‘ಮೃತ ರೈತ ₹6 ಲಕ್ಷ ಸಾಲ ಹೊಂದಿದ್ದ ಎಂದು ತಿಳಿದು ಬಂದಿದೆ. ತನಿಖೆ ನಡೆಸಲಾಗುತ್ತಿದೆ’ ಎಂದು ರೆಹ್ತಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಪಂಕಜ್ ಗೀತೆ ತಿಳಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿರುವ ಕೀರ್ ಅವರ ಮಗ ಶೇರ್ ಸಿಂಗ್, ತಮ್ಮ ತಂದೆ ವಿವಿಧ ಬ್ಯಾಂಕ್ಗಳಲ್ಲಿ ₹4 ಲಕ್ಷ ಮತ್ತು ಬೇರೆ ಕಡೆಗಳಲ್ಲಿ ₹2 ಲಕ್ಷ ಸಾಲ ಮಾಡಿಕೊಂಡಿದ್ದರು ಎಂದೂ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ರೈತರ ಹೋರಾಟವನ್ನು ಹತ್ತಿಕ್ಕಲು ಗೋಲಿಬಾರ್ ನಡೆಸಲಾಗಿತ್ತು. ಈ ವೇಳೆ ಮೃತಪಟ್ಟಿದ್ದ ರೈತರ ಕುಟುಂಬಗಳಿಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪರಿಹಾರ ಘೋಷಿಸಿದ್ದರು. ಇದಾದ ಮರುದಿನವೇ ಕೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.