ಮುಂಬೈ: ಪ್ರತಿಭಟನೆಗೆ ಮಣಿದಿರುವ ಮಹಾರಾಷ್ಟ್ರ ಸರ್ಕಾರ ರೈತರ ಸಾಲ ಮನ್ನಾ ಮಾಡುವುದಾಗಿ ಭಾನುವಾರ ಘೋಷಿಸಿದೆ. ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕಳೆದ 11 ದಿನಗಳಿಂದ ಮಹಾರಾಷ್ಟ್ರದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಎಷ್ಟು ಮೊತ್ತದ ಸಾಲವನ್ನು ಸರ್ಕಾರ ಮನ್ನಾ ಮಾಡಲಿದೆ ಎಂಬ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ.
‘ಮಹಾರಾಷ್ಟ್ರದ ಇತಿಹಾಸದಲ್ಲಿ ಇದೊಂದು ಅತಿ ದೊಡ್ಡ ಸಾಲ ಮನ್ನಾ. ಈ ವಿಚಾರದಲ್ಲಿ ಕಾಂಗ್ರೆಸ್, ಎನ್ಸಿಪಿ ಮತ್ತು ಇತರ ಪಕ್ಷಗಳಿಗೆ ನನ್ನ ಸವಾಲಿದೆ’ ಎಂದು ಫಡಣವೀಸ್ ಹೇಳಿದ್ದಾರೆ. ಮಹಾರಾಷ್ಟ್ರದ ಸರ್ಕಾರಿ ಸಾಲ ಮುಂದಿನ ಮಾರ್ಚ್ ವೇಳೆಗೆ ₹ 4 ಲಕ್ಷ ಕೋಟಿ ತಲುಪಲಿದೆ ಎನ್ನಲಾಗಿದ್ದು, ₹ 31,000 ಕೋಟಿ ಬಡ್ಡಿ ಪಾವತಿಸಬೇಕಾಗುತ್ತದೆ.
ಸಾಲ ಮನ್ನಾ ಮಾಡುವ ವಿಚಾರಕ್ಕೆ ಸಂಬಂಧಿಸಿ ಇತ್ತೀಚೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಊರ್ಜಿತ್ ಪಟೇಲ್ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದರು. ಎಚ್ಚರಿಕೆಯ ಹೆಜ್ಜೆ ಇಡುವಂತೆ ಸೂಚಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.