ಮುಂಬೈ (ಪಿಟಿಐ): ಮುಂಬೈನ ಗೊರೆಗಾಂವ್ ಫಿಲಂ ಸಿಟಿ ಬಳಿ ಶುಕ್ರವಾರ ಮಧ್ಯಾಹ್ನ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಶಿವಸೇನೆಯ ರಾಜು ಶಿಂಧೆ (45) ತೀವ್ರವಾಗಿ ಗಾಯಗೊಂಡಿದ್ದಾರೆ.
ಘಟನೆ ನಡೆದ ಸ್ಥಳದಿಂದ ಅನತಿ ದೂರದಲ್ಲಿ ಅಮಿತಾಬ್ ಬಚ್ಚನ್ ಅವರು ಚಲನಚಿತ್ರವೊಂದರ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ‘ನಾವಿದ್ದ ಸ್ಥಳದಿಂದ 20 ಅಡಿ ದೂರದಲ್ಲಿ ಗುಂಡಿನ ದಾಳಿ ನಡೆದಿದೆ. ಇದೊಂದು ಗ್ಯಾಂಗ್ವಾರ್ ಶೂಟೌಟ್’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಫಿಲಂ ಸಿಟಿಯ ಸ್ಟುಡಿಯೊ ಎರಡರ ಬಳಿ ಏಕಾಏಕಿ ಗುಂಡಿನ ದಾಳಿ ನಡೆಸಿದರು. ಮರದ ಕೆಳಗೆ ಕುರ್ಚಿ ಹಾಕಿಕೊಂಡು ಕುಳಿತಿದ್ದ ರಾಜು ಶಿಂಧೆ ಗುಂಡು ತಗುಲಿ ನೆಲಕ್ಕೆ ಕುಸಿದು ಬಿದ್ದರು. ತಕ್ಷಣವೇ ಅವರನ್ನು ನಾನಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಜು ಶಿಂಧೆ ಅವರು ಭದ್ರತಾ ಸಂಸ್ಥೆಯೊಂದರ ಮಾಲೀಕ ಮತ್ತು ಶಿವಸೇನೆಯ ಚಲನಚಿತ್ರ ಘಟಕವಾದ ‘ಚಿತ್ರಪಥ್ ಸೇನಾ’ದ ಪದಾಧಿಕಾರಿ. ದಾಳಿಯ ನಂತರ ಬೈಕ್ಗಳನ್ನು ಸ್ಥಳದಲ್ಲೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.